ADVERTISEMENT

ಕನ್ನಡದಲ್ಲಿ ಪರೀಕ್ಷೆ ಬರೆಯುವ ಆದೇಶಕ್ಕೆ ವಿರೋಧ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2017, 9:31 IST
Last Updated 19 ಸೆಪ್ಟೆಂಬರ್ 2017, 9:31 IST

ಚಿತ್ರದುರ್ಗ: ಅರ್ಧ ಶೈಕ್ಷಣಿಕ ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಪಿಯು ವಿಭಾಗದ ವಾಣಿಜ್ಯ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಬೇಕು ಎಂದು ಆದೇಶ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಆದೇಶವನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರಥಮ ಪಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಲೆಕ್ಕಶಾಸ್ತ್ರವನ್ನು ಇಂಗ್ಲೀಷ್ ನಲ್ಲಿ ಪರೀಕ್ಷೆ ಬರೆದು ಉತ್ತೀರ್ಣರಾಗಿರುತ್ತಾರೆ. ದ್ವಿತೀಯ ಪಿಯುನಲ್ಲಿ 6 ತಿಂಗಳು ಇಂಗ್ಲೀಷ್ನಲ್ಲಿಯೇ ಲೆಕ್ಕಶಾಸ್ತ್ರ ಕಲಿತಿರುತ್ತಾರೆ. ಈಗ ಅದನ್ನು ಕನ್ನಡ ಮಾಧ್ಯಮದಲ್ಲಿ ಬರೆಯಬೇಕು ಎಂದು ಆದೇಶ ಹೊರಡಿಸಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ ಎಂದು ಪ್ರತಿಭಟನಾಕಾರರು ದೂರಿದರು.

ADVERTISEMENT

ಇಲ್ಲಿಯವರೆವಿಗೂ ಲೆಕ್ಕಶಾಸ್ತ್ರದ ಕನ್ನಡ ಮಾಧ್ಯಮದ ಪುಸ್ತಕಗಳ ಲಭ್ಯವಿಲ್ಲ.  ದ್ವಿತೀಯ ಪಿಯ ಅಂತಿಮ ಪರೀಕ್ಷೆ ಕೇವಲ 5 ತಿಂಗಳು ಬಾಕಿ ಇದೆ. ಈಗ ಹೊಸ ಆದೇಶ ಜಾರಿ ಮಾಡುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕುಂಠಿತಗೊಳ್ಳುತ್ತದೆ. ಈ ಆದೇಶದಿಂದ ಲೆಕ್ಕಶಾಸ್ತ್ರದ ಜತೆಗೆ  ವ್ಯವಹಾರ ಅಧ್ಯಯನ, ಇತಿಹಾಸ, ಅರ್ಥಶಾಸ್ತ್ರವನ್ನೂ ಕನ್ನಡದಲ್ಲೇ ಬರೆಯಬೇಕಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಅಂಕಗಳಲ್ಲಿ ವ್ಯತ್ಯಾಸವಾಗುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಕೂಡಲೇ ಆದೇಶ ರದ್ದುಗೊಳಿಸಿ ಮುಂದಿನ ವಾರ್ಷಿಕ ಸಾಲಿನಲ್ಲಿ ಈ ಆದೇಶ ಅನುಷ್ಠಾನಕ್ಕೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಇಲ್ಲದಿದ್ದರೆ, ರಾಜ್ಯಾದಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಜೆಡಿಎಸ್  ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ, ನಗರ ಅಧ್ಯಕ್ಷ ಉಮೇಶ್‌ಯಾದವ್, ವಿದ್ಯಾರ್ಥಿ ಘಟಕದ ತಾಲ್ಲೂಕು ಅಧ್ಯಕ್ಷ ಅಬೂಬ್, ಪ್ರಶಾಂತ್ ರಾಜ್ಯ ಉಪಾಧ್ಯಕ್ಷ, ಸೇವಾದಳ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಯುವ ಘಟಕದ ಕಾರ್ಯದರ್ಶಿ ಮಲ್ಲಿಕಾರ್ಜುನ್, ರಾಜ್ಯ ಪ್ರದಾನ ಕಾರ್ಯದರ್ಶಿ ಅನಿಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯರ್ರಿಸ್ವಾಮಿ, ಮಂಜುನಾಥ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.