ADVERTISEMENT

ಜಿಲ್ಲಾ ಉಸ್ತುವಾರಿ ಸಚಿವರು ನಿಷ್ಕ್ರಿಯ

​ಪ್ರಜಾವಾಣಿ ವಾರ್ತೆ
Published 6 ಜುಲೈ 2017, 5:05 IST
Last Updated 6 ಜುಲೈ 2017, 5:05 IST

ಹೊಳಲ್ಕೆರೆ: ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಮೂಲಕ ಅವರ ವಿಶ್ವಾಸ ಗಳಿಸಬೇಕು ಎಂದು ಬಿಜೆಪಿ ಮುಖಂಡ ಎಂ.ಚಂದ್ರಪ್ಪ ವಿಸ್ತಾರಕರಿಗೆ ಸಲಹೆ ನೀಡಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ವಿಸ್ತಾರಕರ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಬಡವರಿಗೆ ಅನುಕೂಲ ಆಗುವ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಭ್ರಷ್ಟಾಚಾರ ತಡೆಗೆ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಕಾಂಗ್ರೆಸ್ ಸರ್ಕಾರ 60 ವರ್ಷಗಳಲ್ಲಿ ಮಾಡದ ಕೆಲಸವನ್ನು ಮೋದಿ ಅವರು ಕೇವಲ ಮೂರು ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ. ನರೇಂದ್ರ ಮೋದಿ ಇಸ್ರೇಲ್‌ ಪ್ರವಾಸ ಕೈಗೊಂಡ ಭಾರತ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ ಎಂದರು.

‘ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ದುರಾಡಳಿತ ನಡೆಸುತ್ತಿದೆ. ಸಮಾಜ ಕಲ್ಯಾಣ ಇಲಾಖೆಗೆ ಪ್ರತಿ ವರ್ಷ ₹ 20 ಸಾವಿರ ಕೋಟಿ ಅನುದಾನ ಸಿಗಲಿದ್ದು, ಸಚಿವ ಎಚ್.ಆಂಜನೇಯ ಯಾವುದೇ ಅಭಿವೃದ್ಧಿ ಕಾರ್ಯ ನಡೆಸಿಲ್ಲ. ಸಚಿವರು ನಿಷ್ಕ್ರಿಯರಾಗಿದ್ದು, ಕ್ಷೇತ್ರ ಯಾವುದೇ ಅಭಿವೃದ್ಧಿ ಕಾಣದೆ ಸೊರಗುತ್ತಿದೆ’ ಎಂದು ಆರೋಪಿಸಿದರು.

ADVERTISEMENT

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ವಿಸ್ತಾರಕಿ ಭಾರತಿ ವೀರೇಶ್ ಮಾತನಾಡಿ, ‘ವಿಸ್ತಾರಕರು ಕೇವಲ ಪಕ್ಷದ ಪ್ರಚಾರಕ್ಕೆ ಸೀಮಿತ ಆಗಬಾರದು. ಜನಸೇವೆಯ ಮೂಲಕ ಜನರ ವಿಶ್ವಾಸ ಗಳಿಸಬೇಕು. ಪಕ್ಷವನ್ನು ಬೂತ್‌ ಮಟ್ಟದಿಂದ ಸಂಘಟಿಸಬೇಕು. ತಮಗೆ ಕೊಟ್ಟಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸಬೇಕು. ದೀನ್‌ ದಯಾಳ್ ಉಪಾಧ್ಯಾಯ ಅವರ ಜನ್ಮಶತಾಬ್ದಿಯನ್ನು ನೆನಪಿಸಿಕೊಳ್ಳಲು ಇದು ಸುವರ್ಣಾವಕಾಶ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ‘ಕಾರ್ಯಕರ್ತರು ಶ್ರದ್ಧೆಯಿಂದ ಪಕ್ಷ ಸಂಘಟನೆ ಮಾಡಬೇಕು. ವಾಟ್ಸ್ ಆ್ಯಪ್ ಗ್ರೂಪ್ ಬಳಸಿ ಪ್ರಚಾರ ಕೈಗೊಳ್ಳಬೇಕು. ಯುವಕರು ಫೇಸ್‌ಬುಕ್‌ನಂತಹ ಸಾಮಾಜಿಕ ಜಾಲತಾಣಗಳನ್ನು ಬಳಸಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಹಂಚಿಕೊಳ್ಳಬೇಕು’ ಎಂದು ಸಲಹೆ ನೀಡಿದರು.


ಮುಖಂಡ ಪಿ.ರಮೇಶ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್, ಕಾರ್ಯದರ್ಶಿ ನೆಲ್ಲಿಕಟ್ಟೆ ಜಗದೀಶ್, ದಗ್ಗೆ ಶಿವಪ್ರಕಾಶ್, ಜಿಲ್ಲಾ ಪಂಚಾಯ್ತಿ ಸದಸ್ಯ ತಿಪ್ಪೇಸ್ವಾಮಿ, ಎಲ್.ಬಿ.ರಾಜಶೇಖರ್, ಎಸ್.ಎಂ.ಆನಂದಮೂರ್ತಿ, ಈಶ್ವರಪ್ಪ, ಡಿ.ಸಿ.ಮೋಹನ್, ಜಿ.ಎಚ್. ಶಿವಕುಮಾರ್, ಆಶಾರಾಣಿ, ವಿಕಾಸ್, ಅಶೋಕ, ಚಿತ್ರರವಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಧನಂಜಯ ನಾಯ್ಕ, ಕವಿತಾ ಚಂದ್ರನಾಯ್ಕ ಅವರೂ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.