ADVERTISEMENT

ದೇಶದ ಪ್ರತಿಭೆಗಳು ವಿದೇಶಕ್ಕೆ ಮಾರಾಟ

ಬಾಲಗಂಗಾಧರನಾಥ ಸ್ವಾಮೀಜಿ ಸ್ಮರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ವಿಷಾದ

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 8:45 IST
Last Updated 20 ಜನವರಿ 2017, 8:45 IST
ಚಿತ್ರದುರ್ಗದಲ್ಲಿ ಗುರುವಾರ ನಡೆದ ಬಾಲಗಂಗಾಧರನಾಥ ಸ್ವಾಮೀಜಿ ಅವರ ನಾಲ್ಕನೇ ಪುಣ್ಯ ಸ್ಮರಣೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಪುಷ್ಪನಮನ ಸಲ್ಲಿಸಿದರು.
ಚಿತ್ರದುರ್ಗದಲ್ಲಿ ಗುರುವಾರ ನಡೆದ ಬಾಲಗಂಗಾಧರನಾಥ ಸ್ವಾಮೀಜಿ ಅವರ ನಾಲ್ಕನೇ ಪುಣ್ಯ ಸ್ಮರಣೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ನಿರ್ಮಲಾನಂದನಾಥ ಸ್ವಾಮೀಜಿ ಪುಷ್ಪನಮನ ಸಲ್ಲಿಸಿದರು.   

ಚಿತ್ರದುರ್ಗ: ‘ದೇಶದ ಅನೇಕ ಪ್ರತಿಭಾನ್ವಿತರು ಹೆಚ್ಚಿನ ಹಣ ಗಳಿಕೆಗಾಗಿ ವಿದೇಶಕ್ಕೆ ಮಾರಾಟವಾಗುತ್ತಿದ್ದಾರೆ’  ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ ವಿಷಾದಿಸಿದರು.

ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಗುರುವಾರ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಜ್ಞಾನ ವಿಕಾಸ ಪಾಲಿಟೆಕ್ನಿಕ್ ಕಾಲೇಜಿನಿಂದ ಹಮ್ಮಿಕೊಂಡಿದ್ದ ಬಾಲಗಂಗಾಧರನಾಥ ಸ್ವಾಮೀಜಿ ಅವರ ನಾಲ್ಕನೇ ಪುಣ್ಯ ಸ್ಮರಣೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭಾರತದಂತಹ ಪುಣ್ಯ ಭೂಮಿಯಲ್ಲಿ ಜನಿಸಿ ಈ ಮಣ್ಣಿನ ಋಣ ತೀರಿಸುವುದನ್ನು ಬಿಟ್ಟು, ವೈದ್ಯರು, ಎಂಜಿನಿಯರ್‌ ಆದ ತಕ್ಷಣ ಕೇವಲ ಹಣಕ್ಕಾಗಿ ವಿದೇಶಕ್ಕೆ ಹೋಗುವುದು ಎಷ್ಟರ ಮಟ್ಟಿಗೆ ಸರಿ?’ ಎಂದು ಪ್ರಶ್ನಿಸಿದ ಸಚಿವರು, ‘ಹುಟ್ಟಿದ ನಾಡು, ದೇಶದ ಋಣ ತೀರಿಸಬೇಕು ಎಂಬ ಭಾವನೆ ಎಲ್ಲರೂ ಬೆಳೆಸಿಕೊಳ್ಳಬೇಕು’ ಎಂದರು.

‘ಬಾಲಗಂಗಾಧರನಾಥ ಸ್ವಾಮೀಜಿ ಜಾತ್ಯತೀತವಾಗಿ ಚಿಂತನೆ ಮಾಡುವ ಮೂಲಕ ಅದೇ ಮಾರ್ಗದಲ್ಲಿ ಸಾಗಿ ಉತ್ತಮ ಕೆಲಸಗಳನ್ನು ಮಾಡಿದರು. ತುಳಿತಕ್ಕೆ ಒಳಗಾದ ಜನರಿಗೆ ಸಹಾಯಹಸ್ತ ನೀಡಿ ಅವರನ್ನು ಮೇಲೆತ್ತುವ ಪ್ರಯತ್ನ ಮಾಡಿದರು’ ಎಂದು ಈ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ನೇತೃತ್ವ ವಹಿಸಿದ್ದ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ‘ವ್ಯಕ್ತಿ ಹೊರ ಜಗತ್ತಿಗೆ ಎಷ್ಟು ಸುಂದರವಾಗಿ ಕಂಡರೂ ಅದರ ಹಿಂದಿರುವ ಶ್ರಮ ಮರೆಯಬಾರದು’ ಎಂದು ಹೇಳಿದರು.

‘ವಿದ್ಯಾರ್ಥಿ ಜೀವನದಲ್ಲಿ ಶ್ರಮವಹಿಸಿದರೆ, ಸುಂದರ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ. ತಂದೆ, ತಾಯಿ ದುಡಿದು ನಿಮಗೆ ಉತ್ತಮ ಬದುಕನ್ನು ಕಟ್ಟಿಕೊಡುತ್ತಾರೆ. ಅವರನ್ನು ಸದಾ ಗೌರವಿಸುವ ಮೂಲಕ ಚೆನ್ನಾಗಿ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ‘ಯಾವ ದೇಶ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡು ತ್ತದೆಯೋ ಆ ದೇಶ ಅಭಿವೃದ್ಧಿ ಯಾಗುತ್ತದೆ. ಈ ಕಾರಣದಿಂದಾಗಿಯೇ ಬಾಲಗಂಗಾಧರನಾಥ ಸ್ವಾಮೀಜಿ ಅವರು ವಿವಿಧೆಡೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದರು’ ಎಂದು ತಿಳಿಸಿದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ‘ಬಾಲಗಂಗಾಧರನಾಥ ಸ್ವಾಮೀಜಿ ಅವರು ವಿಶ್ರಾಂತಿ ಇಲ್ಲದೇ, ಮಠ ಮತ್ತು ಶಿಕ್ಷಣ ಸಂಸ್ಥೆಗಳನ್ನು ಬೆಳೆಸಿದರು. 25 ವರ್ಷಗಳ ಹಿಂದೆ ಬರವಿದ್ದಾಗ ಅನೇಕ ಗ್ರಾಮಗಳಿಗೆ ಮಠದಿಂದ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಒದಗಿಸಿ, ಕೆಲವೆಡೆ ಗಂಜಿ ಕೇಂದ್ರಗಳನ್ನು ತೆರೆದಿದ್ದರು’ ಎಂದು ಹೇಳಿದರು.

ಕಬೀರಾನಂದ ಆಶ್ರಮದ ಶಿವಲಿಂಗಾನಂದ ಸ್ವಾಮೀಜಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯ, ರಾಮಕೃಷ್ಣೇಗೌಡ ಇತರರು ಇದ್ದರು. ಪ್ರಾಂಶುಪಾಲ ಸುರೇಶ ಸ್ವಾಗತಿಸಿದರು. ಸೌಮ್ಯಾ ನಿರೂಪಿಸಿದರು.

*
ನಾಗರಿಕ ಸಮಾಜದಲ್ಲಿ ವ್ಯಕ್ತಿಯ ಪ್ರತಿಭೆ ಗುರುತಿಸಬೇಕೆ ಹೊರತು ಜಾತಿ ಮಾನದಂಡ ಆಗಬಾರದು.
-ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT