ADVERTISEMENT

ವೇತನ ಬಿಡುಗಡೆ, ಸೇವಾ ಭದ್ರತೆಗೆ ಆಗ್ರಹ

ಚಳ್ಳಕೆರೆ: ಅತಿಥಿ ಉಪನ್ಯಾಸಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2015, 8:32 IST
Last Updated 10 ಅಕ್ಟೋಬರ್ 2015, 8:32 IST

ಚಳ್ಳಕೆರೆ: ರಾಜ್ಯದಾದ್ಯಂತ ಕಳೆದ ಹಲವಾರು ವರ್ಷಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮತ್ತು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.


ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣ ದಿಂದ ಮೆರವಣಿಗೆ ಮೂಲಕ ಪ್ರಮುಖ ರಸ್ತೆಗಳಲ್ಲಿ ಸಾಗಿದ ಅತಿಥಿ ಉಪನ್ಯಾಸಕರು ನೆಹರೂ ವೃತ್ತಕ್ಕೆ ತೆರಳಿ ಮಾನವ ಸರಪಳಿ ನಿರ್ಮಿಸಿದರು. ನಂತರ ತಾಲ್ಲೂಕು ಕಚೇರಿಗೆ ಆಗಮಿಸಿ ಗ್ರೇಡ್‌ 2 ತಹಶೀಲ್ದಾರ್‌ ಕೆ.ಆರ್.ನಾಗರಾಜ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹಲವಾರು ವರ್ಷಗಳಿಂದ ಕನಿಷ್ಠ ವೇತನಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ನೀಡಲಾಗುವ ಗೌರವ ಧನವನ್ನು ಸಮಯಕ್ಕೆ ಸರಿಯಾಗಿ ನೀಡದೆ ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರಿಗೆ ನೀಡ ಬೇಕಾಗಿರುವ ಬಾಕಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೆಕು. ಯುಜಿಸಿ ನಿಯಮಾವಳಿಯಂತೆ ವೇತನ ವನ್ನು ₹ 25,000ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಬೇಕು. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಸಲ್ಲಿಸಿರುವ ಸೇವೆ ಪರಿಗಣಿಸಿ ಕಾಯಂಗೆ ಕ್ರಮ ಕೈಗೊಳ್ಳಬೇಕು ಎಂದರು.

ತಾಲ್ಲೂಕು ಅತಿಥಿ ಉಪನ್ಯಾಸಕರ ಸಂಘದ ಸಂಚಾಲಕರಾದ ಶರತ್‌ಬಾಬು, ಪರಮೇಶ್‌, ಪುರುಶೋತ್ತಮನಾಯ್ಕ, ರಮೇಶ್‌, ರಾಧಾಸ್ವಾಮಿ, ಶಿವಪ್ರಕಾಶ್‌, ಹರೀಶಬಾಬು, ಸುರೇಶ್, ಧನಂಜಯ, ಮಂಜುನಾಥ, ಶಿವಣ್ಣ, ಪ್ರವೀಣ, ಮಧು, ವಿರೂಪಾಕ್ಷ, ಸಂತೋಷ, ಯರ್ರಿಸ್ವಾಮಿ, ಚಿದಾನಂದ, ರಜನೀಶ್‌, ಶಿಲ್ಪಾ, ಅಮೂಲ್ಯಾ, ರೂಪಿಕಾ, ಕವಿತಾ, ತಾರಾ, ಭಾಗ್ಯಾ, ವಸಂತಲಕ್ಷ್ಮಿ, ಪಲ್ಲವಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.