ADVERTISEMENT

ಸೋಲು–ಗೆಲುವು ಸಮನಾಗಿ ಸ್ವೀಕರಿಸಿ

43ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಷಿಪ್ನಲ್ಲಿ ಸಚಿವ ರಮೇಶ್ ಜಿಗಜಿಣಗಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2017, 5:39 IST
Last Updated 18 ಜನವರಿ 2017, 5:39 IST
ಚಿತ್ರದುರ್ಗ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ 43ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳವಾರ ನಡೆದ ಸಭಾ ಕಾರ್ಯಕ್ರಮವನ್ನು ಸಚಿವ ರಮೇಶ್ ಜಿಗಜಿಣಗಿ ಉದ್ಘಾಟಿಸಿದರು.
ಚಿತ್ರದುರ್ಗ ಹಳೆಯ ಮಾಧ್ಯಮಿಕ ಶಾಲಾ ಆವರಣದಲ್ಲಿ ಆಯೋಜಿಸಿರುವ 43ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳವಾರ ನಡೆದ ಸಭಾ ಕಾರ್ಯಕ್ರಮವನ್ನು ಸಚಿವ ರಮೇಶ್ ಜಿಗಜಿಣಗಿ ಉದ್ಘಾಟಿಸಿದರು.   

ಚಿತ್ರದುರ್ಗ: ‘ಸೋತವರು ಕುಗ್ಗದೆ ಗೆದ್ದವರು ಬೀಗದೆ ಸೋಲು- ಗೆಲುವು ಸಮಾನವಾಗಿ ಸ್ವೀಕರಿಸಿ’ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.

ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯುತ್ತಿರುವ 43ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್ ಚಾಂಪಿಯನ್‌ಷಿಪ್ ಹೊನಲು ಬೆಳಕಿನ ಪಂದ್ಯಾವಳಿಯ 5ನೇ ದಿನದ ಸಭಾ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಬಸವಮೂರ್ತಿ ಮಾದಾರ ಚನ್ನಯ್ಯಸ್ವಾಮೀಜಿ ಮತ್ತು ಅವರ ಬಳಗ ವ್ಯವಸ್ಥಿತವಾಗಿ ಪಂದ್ಯಾವಳಿ ಆಯೋಜಿಸಿರುವುದು ಖುಷಿ ತಂದಿದೆ. ಇದು ಹೇಗೆ ಸಾಧ್ಯ ಎಂದು ಸ್ವಾಮೀಜಿಯನ್ನು ಕೇಳಿದ್ದಕ್ಕೆ ‘ಎಲ್ಲಾ ವರ್ಗದವರು ಸ್ವಪ್ರೇರಣೆಯಿಂದ  ಬೆಂಬಲವಾಗಿ ನಿಂತಿದ್ದಾರೆ’ ಎಂದು ಉತ್ತರಿಸಿದರು. ಇದು ನಿಜಕ್ಕೂ ಸಂತೋಷದ ಸಂಗತಿ’ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

‘ಶಿಕ್ಷಣದ ಜತೆ ಮಕ್ಕಳಿಗೆ ಕ್ರೀಡೆಯೂ ಅತ್ಯವಶ್ಯಕ. ಕ್ರೀಡೆಯಿಂದ ಬುದ್ಧಿ ಚುರುಕಾಗಿ ಆರೋಗ್ಯವೂ ಉತ್ತಮವಾಗುತ್ತದೆ’ ಎಂದರು. ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ‘ಯಾವುದೇ  ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಜಾಣ್ಮೆ ಮತ್ತು ಬುದ್ಧಿವಂತಿಕೆಯಿಂದ ಚಿತ್ರದುರ್ಗದಲ್ಲಿ ರಾಷ್ಟ್ರೀಯ ಜೂನಿ ಯರ್ ವಾಲಿಬಾಲ್ ಪಂದ್ಯಾವಳಿಯನ್ನು ಸ್ವಾಮೀಜಿ ಆಯೋಜಿಸಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸದ ಬಿ.ಎನ್.ಚಂದ್ರಪ್ಪ, ವಿಧಾನಪರಿಷತ್ ಸದಸ್ಯೆ ಜಯಮ್ಮಬಾಲರಾಜ್, ನಗರಸಭೆ ಅಧ್ಯಕ್ಷ ಎಚ್.ಎನ್. ಮಂಜುನಾಥ ಗೊಪ್ಪೆ, ರಾಜ್ಯ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಬೆಟ್ಟೆಗೌಡ, ರತ್ನಮ್ಮ ಇತರರು ಇದ್ದರು.

ರವಿ ಮಲ್ಲಾಪುರ ಸ್ವಾಗತಿಸಿದರು. ಶಿವರಾಂ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಾಲಿಬಾಲ್ ಸಂಸ್ಥೆಯ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಗೊಂದಲ ನಿಜ: ಬಗೆಹರಿಸುವ ಪ್ರಯತ್ನ
‘ರಾಜ್ಯ ಬಿಜೆಪಿಯಲ್ಲಿ ಆಂತರಿಕ ಗೊಂದಲ ಇರುವುದು ನಿಜ. ಕೇಂದ್ರದ ಮುಖಂಡರು ಆದಷ್ಟು ಬೇಗ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ  ಪ್ರಯತ್ನಿಸುತ್ತಿದ್ದಾರೆ’ ಎಂದು ಕೇಂದ್ರ ಕುಡಿಯುವ ನೀರು ಮತ್ತು ಗ್ರಾಮೀಣ ನೈರ್ಮಲ್ಯ ಸಚಿವ ರಮೇಶ ಜಿಗಜಿಣಗಿ ತಿಳಿಸಿದರು.

ಮಂಗಳವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು  ‘ಶಿವಮೊಗ್ಗದಲ್ಲಿ ಉಭಯ ಮುಖಂಡರ ಬೆಂಬಲಿಗರ ನಡುವೆ ನಡೆದಿರುವ ಗಲಾಟೆ  ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ ಆ ರೀತಿಯ ಘಟನೆ ನಡೆದಿದ್ದರೆ ಅದು ತಪ್ಪು’ ಎಂದರು.

‘ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಇಂಥ ಬೆಳವಣಿಗೆಗಳು ಕೊನೆಗೊಳ್ಳಬೇಕು. ವಿದ್ಯಮಾನಗಳ ಬಗ್ಗೆ ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.