ಚಿತ್ರದುರ್ಗ: ಗುರುಭವನದಲ್ಲಿ ಜ. 30 ರಂದು ಬೆಳಿಗ್ಗೆ 11ಕ್ಕೆ ಶಿವಯೋಗಿ ಸಿದ್ದರಾಮೇಶ್ವರರ ಜಯಂತ್ಯುತ್ಸವವನ್ನು ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶ್ರೀರಂಗಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 9ಕ್ಕೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ದಾವಣಗೆರೆ ರಸ್ತೆಯಿಂದ ಮೆರವಣಿಗೆ ಆರಂಭವಾಗಲಿದೆ. ನಂತರ ಸಭಾ ಕಾರ್ಯಕ್ರಮ ನಡೆಯುವ ಸ್ಥಳ ತಲುಪಲಿದೆ ಎಂದರು.
ರಾಜ್ಯ ಸರ್ಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತ್ಯುತ್ಸವ ಆಚರಿಸಲು ₹ 50 ಸಾವಿರ ಅನುದಾನ ನೀಡಿದೆ. ಅದರಲ್ಲಿ ವೇದಿಕೆ, ಕಲಾವಿದರ ಸಂಭಾವನೆ, ಆಹ್ವಾನ ಪತ್ರಿಕೆ ಮುದ್ರಣ ಸೇರಿದಂತೆ ಇತರೆ ವೆಚ್ಚ ಭರಿಸಲಾಗುವುದು. ಸಾರ್ವಜನಿಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಜಯಂತ್ಯುತ್ಸವ ಯಶಸ್ವಿಯಾಗಿ ಆಚರಿಸಲು ಜಿಲ್ಲಾಡಳಿತಕ್ಕೆ ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದರು.
ಶಿವಯೋಗಿ ಸಿದ್ದರಾಮೇಶ್ವರರ ಕುರಿತು ಉಪನ್ಯಾಸ ನೀಡಲು ಸೂಕ್ತ ವ್ಯಕ್ತಿಗಳ ಹೆಸರನ್ನು ಸೂಚಿಸಿದಲ್ಲಿ ಅವರನ್ನು ಸಂಪರ್ಕಿಸಿ ಆಹ್ವಾನಿಸ ಲಾಗುತ್ತದೆ. ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಕಾರ್ಯಕ್ರಮದ ನೇತೃತ್ವ ವಹಿಸುವರು. ಭೋವಿ ಸಮುದಾಯದ ಮುಖಂಡರು, ಸಂಘದ ಅಧ್ಯಕ್ಷರು, ಕಾರ್ಯದರ್ಶಿ ಗಳನ್ನು ಕೂಡ ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಅಂಬಿಗರ ಚೌಡಯ್ಯ ಜಯಂತಿ: ಗುರುಭವನದಲ್ಲಿ ಜ. 21ರಂದು ಬೆಳಿಗ್ಗೆ 11ಕ್ಕೆ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಇದೇ ಸಂದರ್ಭದಲ್ಲಿ ಜಯಂತ್ಯುತ್ಸವ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಸಭೆಯಲ್ಲಿ ಒಮ್ಮತದಿಂದ ನಿರ್ಣಯಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಅಂದು ಬೆಳಿಗ್ಗೆ 9ಕ್ಕೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಜೋಗಿಮಟ್ಟಿ ರಸ್ತೆಯಿಂದ ಮೆರವಣಿಗೆ ಪ್ರಾರಂಭವಾಗಲಿದೆ. ನಂತರ ಸಭಾ ಕಾರ್ಯಕ್ರಮ ನಡೆಯುವ ಸ್ಥಳ ತಲುಪಲಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಗಂಗಾಮತಸ್ಥ ಸಮುದಾಯದ ಮುಖಂಡರು, ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಸೇರಿದಂತೆ ಸಮುದಾಯದ ಸರ್ವರೂ ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಬಸವರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯ ಗಳ ಮುಖಂಡರು ಸೇರಿದಂತೆ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನೀಲಮ್ಮ ಸ್ವಾಗತಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.