ಬಂಟ್ವಾಳ: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಕೆಲವೊಮ್ಮೆ ಅಧಿಕಾರ ಹಸ್ತಾಂತರ ಸಂದರ್ಭ ಎದುರಾದರೆ ರಾಜಕಾರಣಿಗಳು ಪರಸ್ಪರ ಕಚ್ಚಾಟ ನಡೆಸಿ ವಚನ ಭ್ರಷ್ಟರಾಗುತ್ತಾರೆ. ಆದರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟ ವ್ಯವಸ್ಥೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಂತೆ ಅಧಿಕಾರ ಹಸ್ತಾಂತರ ಮತ್ತು ಪದಗ್ರಹಣ ಕಾರ್ಯಕ್ರಮವು ಶಿಸ್ತುಬದ್ಧ ಮತ್ತು ನಿರಾತಂಕವಾಗಿ ನಡೆಯುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡಿನಲ್ಲಿ ಇಲ್ಲಿನ ವಲಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಭಾನುವಾರ ಏರ್ಪಡಿಸಿದ್ದ ಒಕ್ಕೂಟ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಆರ್ಥಿಕ ಸ್ವಾಭಿಮಾನ ಜತೆಗೆ ಸುಸಂಸ್ಕೃತ ಜೀವನ ಪದ್ಧತಿಗೆ ಈ ಯೋಜನೆ ಅನುಕೂಲವಾಗಿದೆ ಎಂದರು.
ಪುರಸಭಾಧ್ಯಕ್ಷ ಪಿ.ರಾಮಕೃಷ್ಣ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯೋಜನಾಧಿಕಾರಿ ಜಯಾನಂದ ಪಿ., ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್, ಜನಜಾಗೃತಿ ವೇದಿಕೆ ಅಧ್ಯಕ್ಷ ರೊನಾಲ್ಡ್ ಡಿಸೋಜ, ಕೇಂದ್ರ ಸಮಿತಿ ಅಧ್ಯಕ್ಷ ಸದಾನಂದ ನಾವೂರು, ಎನ್.ಪ್ರಕಾಶ ಶೆಟ್ಟಿ ಅಳದಂಗಡಿ ಇವರು ಶುಭ ಹಾರೈಸಿದರು.
ಇದೇ ವೇಳೆ ನೂತನ ಅಧ್ಯಕ್ಷ ಶೇಖರ ಸಾಮಾನಿ ಇವರಿಗೆ ನಿಕಟಪೂರ್ವ ಅಧ್ಯಕ್ಷ ಪುರುಷೋತ್ತಮ ಅಧಿಕಾರ ಹಸ್ತಾಂತರಿಸಿದರು. ರಾಜೇಶ ಗೌಡ ಪಂಜಿಕಲ್ಲು ಸ್ವಾಗತಿಸಿ, ಆನಂದ ವಂದಿಸಿದರು. ಮೇಲ್ವಿಚಾರಕ ಎನ್.ರಮೇಶ್ ಕಾರ್ಯಕ್ರಮ ನಿರೂಪಿಸಿದರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.