ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಜುಮಾ ನಮಾಝ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮೂವರು ಮುಸ್ಲಿಂ ಯುವಕರ ಮೇಲೆ ಮೂವರು ಹಿಂದೂ ಯುವಕರು ಹಲ್ಲೆ ನಡೆಸಿದ್ದು, ಒಬ್ಬನಿಗೆ ಚೂರಿಯಿಂದ ಇರಿದು ಪರಾರಿಯಾಗಿದೆ.
ಕಲ್ಲಡ್ಕ ನಿವಾಸಿ ಮುಹಮ್ಮದ್ ಆಶಿರ್ (21) ಚೂರಿ ಇರಿತಕ್ಕೊಳಗಾದ ಯುವಕ. ಈತನ ಜೊತೆಗಿದ್ದ ಜಮೀಲ್ (21) ಮತ್ತು ನಾಸಿರ್ (18) ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ.
ಮೂವರೂ ಕಲ್ಲಡ್ಕದ ಮಸೀದಿಯೊಂದರಲ್ಲಿ ಮಧ್ಯಾಹ್ನ ನಮಾಝ್ ಮುಗಿಸಿ 1.30ರ ಸುಮಾರಿಗೆ ಮನೆಗೆ ಮರಳುತ್ತಿದ್ದರು. ಆಗ ಅವರನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ಯುವಕರ ತಂಡ ಹಲ್ಲೆ ನಡೆಸಿ, ಚೂರಿಯಿಂದ ಇರಿದಿದೆ. ಹಾಶಿರ್ನ ಎಡ ಭುಜಕ್ಕೆ ಗಾಯವಾಗಿದ್ದು, ತುಂಬೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೊಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದು, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಕಲ್ಲಡ್ಕದ ಮಿಥುನ್, ಆತನ ಸಹಚರರಾದ ಯತಿನ್ ಮತ್ತು ಅಮಿತ್ ಕೃತ್ಯ ಎಸಗಿದ್ದಾರೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಗೊತ್ತಾಗಿದೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿರುವ ಪೊಲೀಸರು, ಹಲವು ತಂಡಗಳಲ್ಲಿ ಶೋಧ ನಡೆಸುತ್ತಿದ್ದಾರೆ.
ಚೂರಿ ಇರಿತದ ವಿಷಯ ತಿಳಿಯುತ್ತಿದ್ದಂತೆ ಕಲ್ಲಡ್ಕ ಪಟ್ಟಣದಲ್ಲಿ ಜನ ಜಮಾಯಿಸಿದ್ದಾರೆ. ಪಟ್ಟಣದ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.
ಆಸ್ಪತ್ರೆ ಮುಂದೆ ಜನ ಜಮಾಯಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.