ADVERTISEMENT

ಬೇಗ್‌ ಹೇಳಿಕೆ ಖಂಡಿಸಿ ಬಿಜೆಪಿ ರಸ್ತೆತಡೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2017, 8:46 IST
Last Updated 17 ಅಕ್ಟೋಬರ್ 2017, 8:46 IST

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇನಕಾರಿ ಮಾತುಗಳನ್ನಾಡಿದ ಸಚಿವ ಆರ್‌. ರೋಷನ್‌ ಬೇಗ್‌ ವಿರುದ್ಧ ನಗರದ ಪಿವಿಎಸ್‌ ವೃತ್ತದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಲು ಯತ್ನಿಸಿದ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು, ನಂತರ ಬಿಡುಗಡೆ ಮಾಡಿದರು.

ಇದಕ್ಕೂ ಮೊದಲು ಮಾತನಾಡಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ್‌ ಮಠಂದೂರು, ರಾಜ್ಯ ಸರ್ಕಾರದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿಯ ಮಾತುಗಳನ್ನು ಆಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಆ ಪಕ್ಷದ ಮುಖಂಡರು ಇದಕ್ಕೆ ಕಡಿವಾಣ ಹಾಕುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ನರೇಂದ್ರ ಮೋದಿ ಅವರು ಕೇವಲ ಬಿಜೆಪಿ ಪಕ್ಷದ ಪ್ರಧಾನಿಯಲ್ಲ. ಅವರು ದೇಶದ ಪ್ರಧಾನಿ. ದೇಶದ ಪ್ರತಿಯೊಬ್ಬ ಪ್ರಜೆ ಅವರಿಗೆ ಗೌರವ ತೋರಿಸಬೇಕು. ಆದರೆ, ಕಾಂಗ್ರೆಸ್‌ ಪಕ್ಷದಲ್ಲಿರುವ ಕೆಲವರು, ಪ್ರಧಾನಿ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ. ಇಂತಹ ಸಚಿವರನ್ನು ಸಂಪುಟದಿಂದ ಕೈಬಿಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ಆಗ್ರಹಿಸಿದರು.

ADVERTISEMENT

ಇಂದು ಬಿಜೆಪಿ ವತಿಯಿಂದ ಸಾಂಕೇತಿಕ ರಸ್ತೆ ತಡೆ ನಡೆಸಲಾಗಿದೆ. ಕೂಡಲೇ ರೋಷನ್‌ ಬೇಗ್‌ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಮಾಜಿ ಶಾಸಕ ಯೋಗೀಶ್‌ ಭಟ್‌, ಬಿಜೆಪಿ ನಗರ ದಕ್ಷಿಣ ಮಂಡಲ ಅಧ್ಯಕ್ಷ ಡಿ. ವೇದವ್ಯಾಸ್‌ ಕಾಮತ್‌, ಪಾಲಿಕೆ ಸದಸ್ಯರಾದ ಗಣೇಶ ಹೊಸಬೆಟ್ಟು, ಪೂರ್ಣಿಮಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.