ಮಂಗಳೂರು: ಭಾರತವು ಕಲೆ, ಸಂಸ್ಕೃತಿಗಳನ್ನು ಸಮೃದ್ಧವಾಗಿ ಹೊಂದಿರುವ ದೇಶ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲೆಗಳನ್ನು ಪೋಷಿಸುವ ದೃಷ್ಟಿಯಿಂದ ಅನೇಕ ಕಲಾ ಸಂಘಟನೆಗಳಿಗೆ ಸಾಕಷ್ಟು ಅನುದಾನವನ್ನು ನೀಡುತ್ತಾ ಬಂದಿದೆ ಎಂದು ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಚಂದ್ರಹಾಸ್ ರೈ ಹೇಳಿದರು.
ಶ್ರೀ ಭಾರತೀ ಪದವಿಪೂರ್ವ ಕಾಲೇಜು ಮತ್ತು ಸ್ವಾಮಿ ಸದಾನಂದ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ನಡೆದ ‘ಏಕಾದಶಿ ಶ್ರೀ ದೇವಿ ಮಹಾತ್ಮೆ’ ಯಕ್ಷಗಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಸುಮಾರು 300 ಕಾರ್ಯಕ್ರಮಗಳಾಗಿವೆ. ಇಲಾಖೆಯು ಕಳೆದ ಕೆಲವು ವರ್ಷಗಳಿಂದ ಯಕ್ಷಗಾನ ಪ್ರದರ್ಶನದ ಮೂಲಕ ಇಂದಿನ ಪೀಳಿಗೆಗೆ ಯಕ್ಷಗಾನದ ಪರಿಚಯ ಮಾಡಿಸುತ್ತಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕದ ಕಲೆಗಳನ್ನು ಪೋಷಿಸುವುದಕ್ಕಾಗಿಯೇ ಕೆಲಸ ಮಾಡುತ್ತಿದೆ. ಇದರಿಂದ ಅನೇಕ ಅನುದಾನಗಳನ್ನು ವಿವಿಧ ಸಂಘಟನೆಗಳಿಗೆ ನೀಡಲಾಗುತ್ತದೆ. ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಡಾ. ರಾಜೇಂದ್ರ ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಲಿಕೆಯ ಜತೆಗೆ ಸಂಸ್ಕೃತಿ, ಕಲೆ, ಸ್ವಚ್ಛತೆ, ಶಿಸ್ತುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಖ್ಯಾತ ಯಕ್ಷಗಾನ ಕಲಾವಿದ ರವಿ ಅಲೆವೂರಾಯ, ವಕೀಲ ರಾಮಚಂದ್ರಭಟ್, ಶಿಕ್ಷಕ –ರಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗೇಶ್ವರ ಭಟ್, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ವಿದ್ಯಾಭಟ್, ಹಿರಿಯ ಉಪನ್ಯಾಸಕಿ ಸುಭದ್ರ ಭಟ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಈಶ್ವರ ಪ್ರಸಾದ್ ವೇದಿಕೆಯಲ್ಲಿದ್ದರು. ಯಕ್ಷಭಾರತೀ ಮಂಗಳೂರು, ಅತಿಥಿ ಕಲಾವಿದರು ಮತ್ತು ಶಾಲಾ –ಕಾಲೇಜಿನ ವಿದ್ಯಾರ್ಥಿಗಳಿಂದ ‘ಏಕಾದಶಿ ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರಸಂಗ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.