ADVERTISEMENT

ಜಾನುವಾರು ಸಾಗಿಸುತ್ತಿದ್ದವರ ಮೇಲೆ ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2018, 12:54 IST
Last Updated 5 ಆಗಸ್ಟ್ 2018, 12:54 IST

ಮಂಗಳೂರು: ಸುಳ್ಯದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ತಂಡವೊಂದರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ನಸುಕಿನ ಜಾವ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಗಾಯಗೊಂಡಿದ್ದಾನೆ.

ಕೇರಳದ ಗಡಿಭಾಗ ಅಲೆಟ್ಟಿ ಬಳಿ ಘಟನೆ ನಡೆದಿದೆ. ಬೆಳಗ್ಗಿನ ಜಾವ 4.30ರ ಸುಮಾರಿಗೆ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ತಂಡವೊಂದಕ್ಕೆ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮುಖಾಮುಖಿಯಾಗಿದ್ದಾರೆ. ತಪಾಸಣೆಗಾಗಿ ವಾಹನ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ, ಪಿಕಪ್‌ನಲ್ಲಿದ್ದವರು ಮುಂದಕ್ಕೆ ಹೋಗಲು ಯತ್ನಿಸಿದ್ದಾರೆ.

‘ಪಿಕಪ್‌ ಅಡ್ಡಗಟ್ಟಿದಾಗ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಹಲ್ಲೆಗೆ ಯತ್ನ ಮುಂದುವರಿದಿದೆ. ಬಳಿಕ ವಾಹನದ ಮೇಲೆ ಗುಂಡು ಹಾರಿಸಿದ್ದಾರೆ. ಮೂರು ದನಗಳಿದ್ದ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ವಾಹನದಲ್ಲಿದ್ದ ಒಬ್ಬ ವ್ಯಕ್ತಿ ಕೇರಳದ ಕಣ್ಣೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಕಾಲಿಗೆ ಗುಂಡೇಟು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗುಂಡಿನ ದಾಳಿಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.