ದಾವಣಗೆರೆ: ಅಂಗವಿಕಲ ನೌಕರರ ವಿವಿಧ ಬೇಡಿಕೆ ಒತ್ತಾಯಿಸಿ ಜ. 19ರಂದು ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ರಾಜ್ಯ ಮಟ್ಟದ ಅಂಗವಿಕಲ ನೌಕರರ ಸಮ್ಮೇಳನ ಹಮ್ಮಿಕೊಳ್ಳಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದರು.
ಅಂಗವಿಕಲರ ಇಲಾಖೆಯು ಸದ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿದೆ. ಹೀಗಾಗಿ ಸರಿಯಾದ ಸೌಲಭ್ಯಗಳು ಅಂಗವಿಕಲರಿಗೆ ದೊರೆಯುತ್ತಿಲ್ಲ. ಹೀಗಾಗಿ ಅಂಗವಿಕಲರಿಗೆ ಪ್ರತ್ಯೇಕ ನಿಗಮ–ಮಂಡಳಿ ಸ್ಥಾಪಿಸಬೇಕು. ಆಗ ಮಾತ್ರವೇ ಅಂಗವಿಕಲದ ಅಭಿವೃದ್ಧಿ ಸಾಧ್ಯ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಅಂಗವೈಕಲ್ಯಕ್ಕೆ ಅನುಗುಣವಾಗಿ ಲೋಕಸೇವಾ ಆಯೋಗದ ನೇಮಕಾತಿಗಳಲ್ಲಿ ಹುದ್ದೆಗಳನ್ನು ಹಂಚಿಕೆ ಮಾಡದೇ ಅಂಧರಿಗೆ ಹೆಚ್ಚಿನ ಮೀಸಲಾತಿ ನೀಡಲಾಗಿದೆ. ಇದರಿಂದ ಉಳಿದ 20 ವಿಧದ ನ್ಯೂನತೆ ಹೊಂದಿದವರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯ್ತಿಗಳ 6,022 ಡಾಟಾ ಎಂಟ್ರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅಂಗವಿಕಲರಿಗೆ ಮೀಸಲಾತಿ ನೀಡಿಲ್ಲ. ಆದ್ದರಿಂದ ನೇಮಕಾತಿ ಪ್ರಕ್ರಿಯೆ ನಿಲ್ಲಿಸಬೇಕು. ಜತೆಗೆ ಬಡ್ತಿ ಮೀಸಲಾತಿ, ಸಂಚಾರಿ ಭತ್ಯೆ, ಶಿಕ್ಷಣ ಭತ್ಯೆಯಂತಹ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಸಮ್ಮೇಳನದಲ್ಲಿ ಸರ್ಕಾರವನ್ನು ಒತ್ತಾಹಿಸಲಾಗುವುದು ಎಂದರು.
ಸಮ್ಮೇಳನಕ್ಕೆ ಹಲವು ಸಚಿವರನ್ನು ಆಹ್ವಾನಿಸಲಾಗಿದೆ. ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ಅಂಗವಿಕಲ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಶೋಭಾ, ನಿರ್ದೇಶಕರಾದ ತಿಪ್ಪೇಸ್ವಾಮಿ, ಶೋಭಾ, ಅಂಗವಿಕಲ ನೌಕರರ ಸಂಘದ ಚನ್ನಗಿರಿ ತಾಲ್ಲೂಕು ಅಧ್ಯಕ್ಷ ದಿಳ್ಳೆಪ್ಪ ಸುದ್ದಿಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.