ADVERTISEMENT

ಅತ್ಯಾಚಾರ ಆರೋಪಿಗಳ ಗಡಿಪಾರಿಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2017, 9:42 IST
Last Updated 23 ಡಿಸೆಂಬರ್ 2017, 9:42 IST

ಚನ್ನಗಿರಿ: ವಿಜಯಪುರ ನಗರದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದವರನ್ನು ಬಂಧಿಸಿ, ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲ್ಲೂಕು ಡಿಎಸ್ಎಸ್ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂಥ ಪ್ರಕರಣ ಇದು. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸಬಾರದು. ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ ಕೂಡಲೇ ₨ 50 ಲಕ್ಷ ಪರಿಹಾರ ನೀಡಬೇಕು. ರಾಜ್ಯದಲ್ಲಿರುವ ವಕೀಲರು ಆರೋಪಿಗಳ ಪರ ವಕಾಲತ್ತು ವಹಿಸಬಾರದು. ಒಂದು ವೇಳೆ ಪೊಲೀಸ್ ಇಲಾಖೆ ಅಪರಾಧಿಗಳನ್ನು ಬಂಧಿಸುವಲ್ಲಿ ವಿಳಂಬ ಮಾಡಿದರೆ, ಡಿಎಸ್ಎಸ್ ರಾಜ್ಯದಾದ್ಯಾಂತ ಹೋರಾಟ ನಡೆಸಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಡಿಎಸ್ಎಸ್ ಕಚೇರಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ಮಹಾತ್ಮ ಗಾಂಧಿ ವೃತ್ತ ತಲುಪಿತು. ಆರೋಪಿಗಳನ್ನು ಬಂಧಿಸುವಂತೆ ಘೋಷಣೆ ಕೂಗುತ್ತಾ ಸಾಗಿ, ತಹಶೀಲ್ದಾರ್ ಎಸ್. ಪದ್ಮಕುಮಾರಿ ಅವರಿಗೆ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ADVERTISEMENT

ಡಿಎಸ್‌ಎಸ್ ಸಂಘಟನಾ ಸಂಚಾಲಕರಾದ ಕುಮಾರ್, ಮಂಜಪ್ಪ, ಆನಂದ, ಅಣ್ಣಪ್ಪ, ಆರ್. ಮಹಾರುದ್ರಪ್ಪ, ಕೃಷ್ಣಪ್ಪ, ಹೇಮಂತ್, ಎಚ್.ಎನ್. ಮೂರ್ತಿ ಪ್ರತಿಭಟನೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.