ಚನ್ನಗಿರಿ: ‘70 ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ದಲಿತರನ್ನು ಕೇವಲ ಮತ ಬ್ಯಾಂಕ್ಗಳನ್ನಾಗಿ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡಿದೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ದೂರಿದರು.ಬಿಜೆಪಿ ತಾಲ್ಲೂಕು ಘಟಕ ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಹಾಗೂ ಬಾಬೂ ಜಗಜೀವನರಾಂ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಗರೀಬಿ ಹಠಾವೊ ಎಂದು ಹೇಳಿದ ಕಾಂಗ್ರೆಸ್ನಿಂದ ಬಡತನ ನಿರ್ಮೂಲನೆ ಮಾಡಲು ಸಾಧ್ಯವಾಗಲಿಲ್ಲ. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಿತ್ತು. ಅಂಬೇಡ್ಕರ್ಗೆ ಎನ್ಡಿಎ ಸರ್ಕಾರ ಭಾರತರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಎಸ್ಸಿ, ಎಸ್ಟಿ ವರ್ಗದ ಮೂರು ಕೋಟಿ ಜನರಿಗೆ ಮುದ್ರಾ ಬ್ಯಾಂಕ್ ಮೂಲಕ ಸಾಲ ನೀಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅಂಬೇಡ್ಕರ್ ಸಮಾಧಿ ನಿರ್ಮಾಣಕ್ಕೆ ₹ 100 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಹೇಳಿದರು.
‘ಬರಗಾಲ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗಿವೆ’ ಎಂದು ದೂರಿದರು.ಬಿಜೆಪಿ ಮುಖಂಡ ಮಾಡಾಳ್ ವಿರೂಪಾಕ್ಷಪ್ಪ, ‘ಪರಿಶಿಷ್ಟ ಜಾತಿ ಮತ್ತು ವರ್ಗದವರ ಆರ್ಥಿಕ ಸ್ವಾವಲಂಬನೆಗಾಗಿ ಅಂಬೇಡ್ಕರ್ ಮೀಸಲಾತಿಯನ್ನು ಜಾರಿಗೆ ತಂದರು. ಅವರ 126ನೇ ಜಯಂತಿ ಅಂಗವಾಗಿ ದೇಶದ 126 ಕಡೆಗಳಲ್ಲಿ ಅಂಬೇಡ್ಕರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ವಸತಿ ಶಾಲೆಗಳನ್ನು ಆರಂಭಿಸುತ್ತಿದೆ’ ಎಂದು ಹೇಳಿದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಎಂ.ಎನ್. ಪುಷ್ಪಾವತಿ, ಉಪಾಧ್ಯಕ್ಷ ಹಾಲೇಶ್ನಾಯ್ಕ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಪಿ. ವಾಗೀಶ್, ಎನ್.ಲೋಕೇಶಪ್ಪ, ಯಶೋಧಮ್ಮ, ಮಂಜುಳ ಟಿ.ವಿ, ರಾಜು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಿ.ಎಸ್. ಸಿದ್ದೇಶ್, ಎಂ.ಎನ್. ಮರುಳಪ್ಪ, ಟಿ.ವಿ.ರಾಜು ಪಟೇಲ್, ಎಪಿಎಂಸಿ ಅಧ್ಯಕ್ಷ ಎಂ.ಬಿ. ರಾಜಪ್ಪ, ಯುವ ಸಾಹಿತಿ ಉಚ್ಚಂಗಿ ಪ್ರಸಾದ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕಮಲಮ್ಮ ಹಾಜರಿದ್ದರು. ಎಸ್ಸಿ ಮೋರ್ಚಾ ಅಧ್ಯಕ್ಷ ಟಿ. ಲಕ್ಷ್ಮಣನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.