ADVERTISEMENT

‘ಗೋಶಾಲೆ ಮೇವು ವ್ಯರ್ಥವಾಗದಿರಲಿ’

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2017, 8:42 IST
Last Updated 22 ಆಗಸ್ಟ್ 2017, 8:42 IST

ಜಗಳೂರು: ಬರಗಾಲದಿಂದ ಕಂಗಾಲಾ ಗಿರುವ ರೈತರ ಹಿತದೃಷ್ಟಿಯಿಂದ ತಾಲ್ಲೂಕಿನ ಕಲ್ಲೇದೇವಪುರ ಗ್ರಾಮದಲ್ಲಿ ಜಿಲ್ಲೆಯಲ್ಲೇ ಏಕೈಕ ಗೋಶಾಲೆಯನ್ನು ತೆರೆಯಲಾಗಿದೆ ಎಂದು ಶಾಸಕ ಎಚ್‌.ಪಿ. ರಾಜೇಶ್‌ ಹೇಳಿದರು.

ತಾಲ್ಲೂಕಿನ ಕಲ್ಲೇದೇವಪುರ ಗ್ರಾಮದಲ್ಲಿ ಸೋಮವಾರ ಗೋಶಾಲೆಗೆ ಚಾಲನೆ ನೀಡಿ ಮಾತನಾಡಿ, ‘ಸತತ ಬರಗಾಲದಿಂದ ಅಂತರ್ಜಲ ಕುಸಿತವಾಗಿ ಜಾನುವಾರುಗಳಿಗೆ ಮೇವು, ನೀರಿನ ಕೊರತೆಯಾಗಿದೆ. ಸಂಕಷ್ಟದಲ್ಲಿರುವ ಜಾನುವಾರುಗಳನ್ನು ಉಳಿಸಿಕೊಳ್ಳುವ ಸಲುವಾಗಿ ಈ ಭಾಗದಲ್ಲಿ ಗೋಶಾಲೆ ತೆರೆಯಬೇಕಾದ ಅಗತ್ಯ ಇತ್ತು.

ರೈತರು ಹೊಂದಾಣಿಕೆಯಿಂದ ಗೋಶಾಲೆಯ ಸೌಲಭ್ಯ ಪಡೆದುಕೊಳ್ಳಬೇಕು. ಪಕ್ಕದ ಆಂಧ್ರಪ್ರದೇಶದಿಂದ ನಿತ್ಯ ಮೇವು ತರಿಸಲಾಗುತ್ತಿದ್ದು, ಮೇವು ವ್ಯರ್ಥವಾಗದಂತೆ ಉಪಯೋಗಿಸಿ ಕೊಳ್ಳಬೇಕು ಎಂದು ರೈತರಿಗೆ ಕಿವಿಮಾತು ಹೇಳಿದರು.

ADVERTISEMENT

ಕೃಷಿ ಇಲಾಖೆಯಿಂದ ಕೃಷಿಭಾಗ್ಯ, ರಿಯಾಯ್ತಿ ದರದಲ್ಲಿ ಪ್ಲಾಸ್ಟಿಕ್‌ ತಾಡಪಾಲು, ತುಂತುರು ನೀರಾವರಿ ಸಾಮಗ್ರಿ ಸೇರಿದಂತೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಭದ್ರಾ ಮೇಲ್ದಂಡೆ ಯೋಜನೆಯಡಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, 20 ಸಾವಿರ ಹೆಕ್ಟೇರ್‌ಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. 157 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಮೋದನೆ ಹಂತದಲ್ಲಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.

ತಹಶೀಲ್ದಾರ್‌ ಶ್ರೀಧರಮೂರ್ತಿ, ಗ್ರೇಡ್‌–2 ತಹಶೀಲ್ದಾರ್‌ ದಿವಾಕರ್‌ ರೆಡ್ಡಿ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ.ಬಸಣ್ಣ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಬಸವರಾಜಪ್ಪ, ಲೋಕೇಶ್‌ ಅವರೂ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.