ADVERTISEMENT

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ: ಮಾಡಾಳ್

​ಪ್ರಜಾವಾಣಿ ವಾರ್ತೆ
Published 16 ಜುಲೈ 2017, 8:30 IST
Last Updated 16 ಜುಲೈ 2017, 8:30 IST

ಚನ್ನಗಿರಿ: ‘ಬಿಜೆಪಿ ಒಂದು ವರ್ಗ ಹಾಗೂ ಜಾತಿಗೆ ಸೀಮಿತವಾದ ಪಕ್ಷವಲ್ಲ. ಎಲ್ಲಾ ವರ್ಗದವರ ಕಲ್ಯಾಣಕ್ಕಾಗಿ ಈ ಪಕ್ಷ ಶ್ರಮಿಸುತ್ತಿದೆ. ಅಲ್ಪಸಂಖ್ಯಾತರ ವಿರೋಧಿಯಲ್ಲ’ ಎಂದು ಮಾಜಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಸ್ಪಷ್ಟಪಡಿಸಿದರು. ತಾಲ್ಲೂಕಿನ ನಲ್ಲೂರು ಗ್ರಾಮದಲ್ಲಿ ಶನಿವಾರ ಭಗೀರಥ ಸಮುದಾಯ ಭವನದಲ್ಲಿ ನಡೆದ ನಲ್ಲೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಕಾರ್ಯಕರ್ತರ ಹಾಗೂ ವಿಸ್ತಾರಕರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನದಲ್ಲಿ ಬಿಜೆಪಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮರು ಸೇರ್ಪಡೆಯಾಗುತ್ತಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ 27 ಮಸೀದಿಗಳ ಅಭಿವೃದ್ಧಿಗೆ ₹2 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜಾತಿ, ಜಾತಿಗಳ ನಡುವೆ ವರ್ಗ ಸಂಘರ್ಷ ಹುಟ್ಟು ಹಾಕುತ್ತಿದೆ’ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮಾತನಾಡಿ,  ಉತ್ತರಪ್ರದೇಶ ರಾಜ್ಯದ ಮಾದರಿಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ  ವಿಸ್ತಾರಕರು ಮತದಾರರ ಮನೆ ಬಾಗಿಲಿಗೆ ಹೋಗಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎನ್. ಲೋಕೇಶಪ್ಪ, ಯಶೋದಮ್ಮ ಮರುಳಪ್ಪ, ಮಂಜುಳ ಟಿ.ವಿ. ರಾಜು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಇ.ಆರ್. ಸುಜಾತಾ ಬಸವರಾಜ್, ಉಪಾಧ್ಯಕ್ಷ ಎಚ್. ಹಾಲೇಶ್‌ನಾಯ್ಕ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಆಶಾ ಜನಾರ್ದನ್, ಪ್ರೇಮಾ ಕುಮಾರ್, ಕೆ. ಕೆಂಚಪ್ಪ, ಕೆ. ಬಸವರಾಜ್, ಎಂ.ಎನ್. ಪುಷ್ಪಲತಾ, ಅನ್ಸರ್ ಅಹಮದ್ ಉಪಸ್ಥಿತರಿದ್ದರು. ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಪಿ.ಎಸ್. ಸಿದ್ದೇಶ್ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.