ಉಚ್ಚಂಗಿದುರ್ಗ: ‘ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಲೆಯಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆಯಲಿದೆ’ ಎಂದು ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಇಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಅರಸೀಕೆರೆ ಮಂಡಲದ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಜನಪರ ಯೋಜನೆಗಳಾದ ಡಿಜಿಟಲ್ ಇಂಡಿಯಾ, ಜನ್ಧನ್, ಅಟಲ್ ಪಿಂಚಣಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ಆದರ್ಶ ಗ್ರಾಮ ಸೇರಿದಂತೆ ಅನೇಕ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು ಎಂದರು.
ಮುಂದಿನ ಚುನಾವಣೆಯಲ್ಲಿ ಜಗಳೂರು ಸೇರಿದಂತೆ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಗೆಲುವು ಪಡೆಯಲಿದೆ ಎಂದರು. ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ, ರಾಜ್ಯಾದ್ಯಂತ ಪಕ್ಷಕ್ಕೆ ಜನಬೆಂಬಲ ವ್ಯಕ್ತವಾಗುತ್ತಿದೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು ಪಕ್ಷಕ್ಕೆ ಶ್ರೀರಕ್ಷೆಯಾಗಿದೆ.
ರಾಜ್ಯ ಘಟಕದ ಅಧ್ಯಕ್ಷರ ಸಲಹೆ ಮೇರೆಗೆ ನ. 1ರಂದು ಬೂತ್ ಮಟ್ಟದಿಂದ ಮೂರು ಬೈಕ್ಗಳಂತೆ ಬೆಂಗಳೂರಿಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಾಜಿ ಶಾಸಕ ಎಸ್.ವಿ ರಾಮಚಂದ್ರಪ್ಪ ಮಾತನಾಡಿದರು.
ಜಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ರಮೇಶ ನಾಯ್ಕ್, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಗೀತಾ ಗಂಗಾಧರ ನಾಯ್ಕ್, ಸದಸ್ಯ ಶಾಂತಮ್ಮ ಶಶಿಕುಮಾರ್, ರಶ್ಮಿ ರಾಜಪ್ಪ, ಮುಖಂಡರಾದ ಅರಸೀಕೆರೆ ಕೊಟ್ರೇಶ್, ಮಹಾಬಲೇಶ್ವರ ಗೌಡ, ನಂಜನಗೌಡ, ಕೆಂಚನಗೌಡ, ದ್ಯಾಮನಗೌಡ, ನಾಗಪ್ಪ, ಜಯಲಕ್ಷೀಬಾಯಿ, ಮಂಜುನಾಥ ಸ್ವಾಮಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.