ಸಾಸ್ವೆಹಳ್ಳಿ: ‘ದೇಶದ ಅನೇಕ ರಾಜ್ಯಗಳಲ್ಲಿ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡೂ ಅನ್ನದಾತನ ನೋವು, ಅಳಲನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಇಲ್ಲದೆ ಅಧಿಕಾರಕ್ಕಾಗಿ ಹಪಹಪಿಸುತ್ತಾ ಕಾಲಹರಣ ಮಾಡುತ್ತಿವೆ’ ಎಂದು ಜೆಡಿಎಸ್ನ ಹೊನ್ನಾಳಿ ತಾಲ್ಲೂಕು ಗೌರವಾಧ್ಯಕ್ಷ ಕೆ.ದೇವೇಂದ್ರಪ್ಪ ಆರೋಪಿಸಿದರು.
ಸಾಸ್ವೆಹಳ್ಳಿ ಹೋಬಳಿಯ ಹನಗವಾಡಿಯ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಹೊನ್ನಾಳಿ ತಾಲ್ಲೂಕು ಜೆಡಿಎಸ್ ಸಂಘಟನಾ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.ಜನರು ಪ್ರಾದೇಶಿಕ ಪಕ್ಷ ಬೆಂಬಲಿಸಿದರಷ್ಟೇ ಸಮಸ್ಯೆ ಬಗೆಹರಿಯಲಿದೆ ಎಂದರು. ತಾಲ್ಲೂಕು ಕಾರ್ಯಾಧ್ಯಕ್ಷ ಬಿ.ಎಲ್.ರವೀಂದ್ರನಾಥ್ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ಬಾಣಂತಿಯರಿಗೆ ₹ 5000 ಮಾಸಾಶನ, ಕೃಷಿಗೆ ಆದ್ಯತೆ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ಹಲವು ಜನಪರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಭರವಸೆ ಕೊಟ್ಟರು.
ಸಾಸ್ವೆಹಳ್ಳಿ ಬ್ಲಾಕ್ ಅಧ್ಯಕ್ಷ ಎ.ಎಸ್.ಶಿವಲಿಂಗಪ್ಪ ಮಾತನಾಡಿ, ‘ಮೇ 3ರಂದು ಹೊನ್ನಾಳಿಯ ಗುರುಭವನದಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಭೆ ಆಯೋಜಿಸಲಾಗಿದೆ. ಪಕ್ಷದ ಅಭಿಮಾನಿಗಳು, ನೆರೆಯ ಪಕ್ಷಗಳ ಮುಖಂಡರು ಭಾಗವಹಿಸಬೇಕು’ ಎಂದು ಕೇಳಿಕೊಂಡರು.ಪ್ರಚಾರ ಸಮಿತಿ ಅಧ್ಯಕ್ಷ ಶಿವಮೂರ್ತಿ ಗೌಡ, ಪ್ರಧಾನ ಕಾರ್ಯದರ್ಶಿ ಕೆ.ಎಲ್.ವೀರೇಶರಾವ್ ಮಾತನಾಡಿದರು. ಪಕ್ಷದ ಮುಖಂಡರಾದ ಗುರುಬಸಪ್ಪ, ಇಕ್ಬಾಲ್, ರಮೇಶ್ ನಾಯ್ಕಾ, ಪರಮೇಶಪ್ಪ ಹಾಗೂ ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.