ಚಿಕ್ಕಜಾಜೂರು: ಮೂರು ದಿನಗಳಿಂದ ವಿದ್ಯುತ್ ಪೂರೈಸಿಲ್ಲ ಎಂದು ಆರೋಪಿಸಿ ಬುಧವಾರ ವಿವಿಧ ಗ್ರಾಮಗಳ ರೈತರು ಹಾಗೂ ಗ್ರಾಮಸ್ಥರು ವಿದ್ಯುತ್ ವಿತರಣಾ ಘಟಕಕ್ಕೆ ಮುತ್ತಿಗೆ ಹಾಕಿ, ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಮಾರ್ಚ್ 19ರಂದು ಸಮೀಪದ ಗುಂಜಿಗನೂರು ಗೇಟ್ ಬಳಿಯ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ಮನ್ ಚಾಂದ್ ಪೀರ್ ಗಾಯಗೊಂಡಿದ್ದರು. ನಂತರ ವಿದ್ಯುತ್ ಸಂಪರ್ಕ ನೀಡಿಲ್ಲ. ಪಂಪ್ಸೆಟ್ಗೆ ವಿದ್ಯುತ್ ಪೂರೈಕೆ ಇಲ್ಲದೆ ತೋಟಗಳು ನೀರಿಲ್ಲದೆ ಒಣಗುತ್ತಿವೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಇಷ್ಟಾದರೂ, ಬೆಸ್ಕಾಂ ಅಧಿಕಾರಿಗಳು ಕ್ರಮ ಕೈಗೊಂಡು ವಿದ್ಯುತ್ ಸಂಪರ್ಕ ಕೊಟ್ಟಿಲ್ಲ. ಈಗಿರುವ ತಂತಿ ಜೋಡಣೆ ವ್ಯವಸ್ಥೆ ಬದಲು ಹ್ಯಾಂಡಲ್ ಜೆಒಸಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಬಂದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಪ್ಪೇಸ್ವಾಮಿ ಪ್ರತಿಭಟನಾಕಾರರ ಮನವೊಲಿಸಿ ವಿದ್ಯುತ್ ಸಂಪರ್ಕ ಕಲ್ಪಿಸುವ ಭರವಸೆ ನೀಡಿದರು. ಹ್ಯಾಂಡಲ್ ಜೆಒಸಿ ಸಂಪರ್ಕ ಹಾಕುವವರೆಗೂ ವಿದ್ಯುತ್ ಸಂಪರ್ಕಕ್ಕೆ ಅವಕಾಶ ನೀಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದರು. ಬಳಿಕ ಪೂರೈಸುವ ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂಪಡೆದರು.
ಸಂಜೆ 5ಕ್ಕೆ ವಿದ್ಯುತ್ ಸಂಪರ್ಕ ನೀಡಲಾಯಿತು.
ಪ್ರತಿಭಟನೆ ವೇಳೆಯಲ್ಲಿ ಪೊಲೀಸರ ಜತೆ ವಾಗ್ವಾದ ನಡೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.