ನ್ಯಾಮತಿ: ಸಮೀಪದ ಸವಳಂಗ ಗ್ರಾಮದಲ್ಲಿ ಹಾದು ಹೋಗಿರುವ ಕುಮಟಾ–ಕಾರಮಡಗಿ ಹೆದ್ದಾರಿ ಪಕ್ಕದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬರುವ ವಿದ್ಯಾರ್ಥಿಗಳು ಹೆದ್ದಾರಿ ಪಕ್ಕದಲ್ಲಿಯೇ ಸಂಚರಿಸುತ್ತ ಅಪಾಯ ಎದುರಿಸುತ್ತಿದ್ದಾರೆ ಎಂದು ಸವಳಂಗ ನಾಗರಿಕ ಹಿತರಕ್ಷಣೆ ಸಮಿತಿ ಅಧ್ಯಕ್ಷ ಎನ್. ಗೀರೀಶ ಆತಂಕ ವ್ಯಕ್ತಪಡಿಸಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಪ್ರತಿದಿನ ಬೆಳಿಗ್ಗೆ ಶಾಲೆಗೆ ಬರುವ ವಿದ್ಯಾರ್ಥಿಗಳು, ಶಿಕ್ಷಕರು ಮುಖ್ಯದ್ವಾರದ ಗೇಟಿನ ಬೀಗ ತೆಗೆಯುವ ತನಕ ರಸ್ತೆಯ ಅಕ್ಕಪಕ್ಕ ಆಟವಾಡುವುದು, ಓಡುವುದು ಹಾಗೂ ರಸ್ತೆ ಬದಿಯ ತಿನಿಸು ಅಂಗಡಿಗಳ ಮುಂದೆ ನಿಲ್ಲುತ್ತಾರೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳು ಅಪಘಾತಕ್ಕೆ ಈಡಾಗುವ ಸಂಭವ ಇದೆ’ ಎಂದರು.
ಸಂಬಂಧಪಟ್ಟ ಪೋಷಕರು ಮತ್ತು ಶಾಲೆಯ ಶಿಕ್ಷಕರು ಗಮನಹರಿಸಿ, ವಿದ್ಯಾರ್ಥಿಗಳು ಬರುವ ಮುಂಚೆಯೇ ಗೇಟು ತೆರೆಸಬೇಕು. ನಿಗದಿತ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ಬರುವಂತೆ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡುವ ಮೂಲಕ ಕಾಳಜಿ ತೋರಬೇಕು ಎಂದು ಅವರು ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ಮಂಜುನಾಥ, ದಾಮೋದರ, ನಾಗರಾಜ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.