ಹುಬ್ಬಳ್ಳಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಮುಖಂಡರು ರಾಜ್ಯದಲ್ಲಿ ತಮ್ಮದೆ ಹವಾ ಇದೆ ಎಂಬ ಭ್ರಮೆಯಲ್ಲಿ ಇದ್ದಾರೆ. ಈ ಭ್ರಮೆ ಅಲ್ಪಕಾಲಿಕವಾಗಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.ಇಲ್ಲಿನ ಕಂಚಗಾರ ಗಲ್ಲಿಯ ನಗರೇಶ್ವರ ದೇವಸ್ಥಾನದ ಸಮೀಪ ಹಾಗೂ ಅರಳಿಕಟ್ಟಿ ಓಣಿ, ಗಂಜಿ ಓಣಿಯಲ್ಲಿ ಎಸ್ಎಫ್ಸಿ ಅನುದಾನ ರೂ 9 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಬುಧವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
2018ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣಾ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರವೇಶವಾದ ಬಳಿಕ ಹವಾ ಯಾರದಿದೆ ಎಂಬುದು ಸ್ಪಷ್ಟವಾಗಲಿದೆ ಎಂದರು.ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಹುಲ್ ಗಾಂಧಿ ಮತ್ತು ದಿಗ್ವಿಜಯ್ ಸಿಂಗ್ ಇಬ್ಬರೇ ಸಾಕು ಎಂದು ಹೇಳಿದರು.
ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರ ನೀಡಬೇಕಿರುವ ಪಿಂಚಣಿ ಹಣ ರೂ 110 ಕೋಟಿ ಬಾಕಿಯನ್ನು ತಕ್ಷಣ ನೀಡಿದರೆ ಹಾಗೂ ಹೆಚ್ಚುವರಿಯಾಗಿ ರೂ100 ಕೋಟಿ ಒದಗಿಸಿದರೆ ಅವಳಿ ನಗರದಲ್ಲಿ ರಸ್ತೆ ಮತ್ತಿತರ ಮೂಲಸೌಲಭ್ಯ ಒದಗಿಸಲು ಅನುಕೂಲವಾಗುತ್ತದೆ ಎಂದರು.
ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ನಿಧಿ ಯೋಜನೆಯಡಿ ಅವಳಿ ನಗರದ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ರೂ 368 ಕೋಟಿ ಅನುದಾನ ಒದಗಿಸಿದೆ. ಇದರಲ್ಲಿ ಈಗಾಗಲೇ ರೂ 200 ಕೋಟಿ ಮೊತ್ತದಲ್ಲಿ 109 ಕಿ.ಮೀ. ರಸ್ತೆ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಹೇಳಿದರು.ಶಾಸಕ ಪ್ರಸಾದ ಅಬ್ಬಯ್ಯ, ಮಹಾನಗರ ಪಾಲಿಕೆ ಮೇಯರ್ ಡಿ.ಕೆ.ಚವ್ಹಾಣ, ಸದಸ್ಯ ಶಿವು ಮೆಣಸಿನಕಾಯಿ, ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಮಾಜಿ ಶಾಸಕ ಅಶೋಕ ಕಾಟವೆ, ಬಿಜೆಪಿ ಮುಖಂಡರಾದ ಲಕ್ಷ್ಮಣ ಬೀಳಗಿ, ಗೋಪಾಲ ಬದ್ನಿ, ರಂಗ ಬದ್ನಿ, ಸಂತೋಷ ಅರಕೇರಿ, ದೀಪಕ್ ಮೆಹರವಾಡೆ, ರಾಜು ಕೊರನಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.