ಧಾರವಾಡ: ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ ಅವರನ್ನು ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿ ಕರೆದೊಯ್ದರು.
ಕಿಮ್ಸ್ ಶೂಟೌಟ್ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಕೈವಾಡ ಇದೆ ಎಂದು ಕೆಲ ದಿನಗಳ ಹಿಂದೆ ಆರೋಪ ಮಾಡಿದ್ದರು. ಮಲ್ಲಮ್ಮ ಗೌಡರ, ತವನಪ್ಪ ಅಷ್ಟಗಿ, ಬಸವರಾಜ ಕೊರವರ ಹಾಗೂ ಅಮೃತ ದೇಸಾಯಿ ವಿರುದ್ಧ ಬೆಂಗಳೂರಿನ ಸಿಜೆಎಂ ನ್ಯಾಯಾಲಯದಲ್ಲಿ ವಿಜಯ ಕುಲಕರ್ಣಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ತವನಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ನೋಟಿಸ್ ನೀಡಿದ್ದರೂ ಹಾಜರಾಗಿರಲಿಲ್ಲ. ಹೀಗಾಗಿ ಬಂಧನ ವಾರೆಂಟ್ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕೊಪ್ಪದಕೇರಿಯಲ್ಲಿರುವ ಮನೆಯಲ್ಲಿದ್ದ ತವನಪ್ಪ ಅವರನ್ನು ಬಂಧಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ತವನಪ್ಪ, ‘ಆರೋಗ್ಯ ಸಮಸ್ಯೆಯಿಂದಾಗಿ ನ್ಯಾಯಾಲಯಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಯಾರ ಮಾನವನ್ನೂ ಕಳೆದಿಲ್ಲ. ಆದರೆ, ನನ್ನ ಮಾನ ಕಳೆಯುವ ಸಲುವಾಗಿ ಸಚಿವ ವಿನಯ ಕುಲಕರ್ಣಿ ಈ ಕೆಲಸ ಮಾಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಇಂತಹ ಬಂಧನಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಜನರೇ ಇವರಿಗೆ ಕಲ್ಲು ಎಸೆಯುವ ಕಾಲ ಬರಲಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಬೆಳವಣಿಗೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಕೆಲ ಹೊತ್ತು ಪ್ರತಿಭಟನೆ ನಡೆಸಿ ಕಾಂಗ್ರೆಸ್ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.