ADVERTISEMENT

ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ

ಸಹಸ್ರಾರು ಬೆಂಬಲಿಗರನ್ನು ಕರೆತಂದು ಬಲ ಪ್ರದರ್ಶನ ನಡೆಸಿದ ಬೆಲ್ಲದ, ಕಿತ್ತೂರ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2018, 9:15 IST
Last Updated 25 ಏಪ್ರಿಲ್ 2018, 9:15 IST

ಧಾರವಾಡ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಮಂಗಳವಾರ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಜತೆ ಇತರ ಪಕ್ಷ ಹಾಗೂ ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮಹಾನಗರ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸಿ ಮಾತನಾಡಿದ ಅರವಿಂದ ಬೆಲ್ಲದ, ‘ಮುಂದಿನ ಅವಧಿಯಲ್ಲಿ ಕ್ಷೇತ್ರದಲ್ಲಿ ಅಂದಾಜು 10 ಸಾವಿರ ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಿದ್ದೇನೆ.  ಉತ್ತಮ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತನಾಗುತ್ತೇನೆ. ಅಲ್ಲದೇ ಹುಬ್ಬಳ್ಳಿ-ಧಾರವಾಡದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸ್ವಚ್ಛ ನಗರವನ್ನಾಗಿಸುವ ಗುರಿ ಹೊಂದಿದ್ದೇನೆ’ ಎಂದರು.

ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಇಸ್ಮಾಯಿಲ್‌ ತಮಟಗಾರ ಮಾತನಾಡಿ, ‘ವಿದ್ಯಾನಗರಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವವರಿಗೆ ಆಡಳಿತ ಮಾಡುವ ಅವಕಾಶ ಸಿಗಬೇಕೇ ಹೊರತು, ಉದ್ಯಮಿಗಳಿಗೆ ಅಲ್ಲ. ಜಾತಿ ಹೆಸರಲ್ಲಿ ಮತ ಕೇಳುವವರು ಅಭಿವೃದ್ಧಿ ಮಾಡುವವರಲ್ಲ. ಅಂತವರಿಗೆ ಅಭಿವೃದ್ಧಿ ಮಾಡುವುದು ಗೊತ್ತಿಲ್ಲ’ ಎಂದು ಹೇಳಿದರು.

ಜೆಡಿಎಸ್‌ ಅಭ್ಯರ್ಥಿ ಅಲ್ತಾಫ್‌ ಕಿತ್ತೂರ ಮಾತನಾಡಿ, ‘ಪಕ್ಷದ ವರಿಷ್ಠರು ಮೊದಲು ನನಗೆ ಬಿ– ಫಾರಂ ನೀಡಿದ್ದಾರೆ. ಅದರೊಂದಿಗೆ ಮೊದಲು ನಾನೇ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದೇನೆ. ತಮ್ಮ ಮತ್ತು ಗುರುರಾಜ ಹುಣಸಿಮರದ ಅವರ ನಡುವೇ ಯಾವುದೇ ಗೊಂದಲ ಇಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದನ್ನು ಪಕ್ಷದ ಮುಖಂಡರು ನೋಡಿದ್ದಾರೆ. ಹೀಗಾಗಿ, ನನಗೆ ಟಿಕೆಟ್‌ ನೀಡಿದ್ದಾರೆ’ ಎಂದರು.

ಧಾರವಾಡ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಕಾಂತ ಜಮನಾಳ ಅವರ ತಮ್ಮ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.