ಧಾರವಾಡ: ‘ಜನರಿಗೆ ಕಾನೂನು ಸೇವೆಗಳಡಿ ಇರುವ ಸವಲತ್ತುಗಳ ಬಗ್ಗೆ ಮನವರಿಕೆ ಮಾಡಿಕೊಡುವುದು ಅಗತ್ಯವಾಗಿದೆ. ಇದಕ್ಕಾಗಿ ಕಾಯಂ ಜನತಾ ನ್ಯಾಯಾಲಯ, ರಾಜಿ ಸಂಧಾನ, ಸಂಚಾರಿ ನ್ಯಾಯಾಲಯಗಳು ಅತ್ಯಗತ್ಯ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಸ್.ಸುಜಾತಾ ಹೇಳಿದರು.
ಕಾನೂನು ಸೇವೆಗಳ ದಿನಾಚರಣೆ ಪ್ರಯುಕ್ತ ನಡೆದ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ‘ಕಾನೂನಿನ ಮೂಲಕ ವ್ಯಾಜ್ಯಗಳನ್ನು ಶೀಘ್ರದಲ್ಲೇ ಬಗೆಹರಿಸಬಹುದು. ಎಲ್ಲರೂ ಕಾನೂನು ಸಲಹೆ ಪಡೆದು ಪರಿಹಾರ ಕಂಡುಕೊಳ್ಳಬೇಕು. ಈ ಕಾರ್ಯದಲ್ಲಿ ವಕೀಲರ ಪಾತ್ರ ಮಹತ್ವದ್ದು. ಇಂಥ ಸೇವೆಗಳನ್ನು ಪಡೆದುಕೊಳ್ಳಲು ಎಲ್ಲರೂ ಪಣ ತೊಡಬೇಕು’ ಎಂದು ಹೇಳಿದರು.
ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಹುದ್ದಾರ ಮಾತನಾಡಿ, ‘ಕೈದಿಗಳು ಮತ್ತು ಕಂದಾಯ ಅಧಿಕಾರಿಗಳಿಗೆ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಗಿದೆ. ಇಲ್ಲಿ ಅರಿತದ್ದನ್ನು ಇತರರಿಗೆ ತಿಳಿಸುವ ಕಾರ್ಯ ಮಾಡಬೇಕು’ ಎಂದು ಹೇಳಿದರು.
ಹೈಕೋರ್ಟ್ನ ನ್ಯಾಯಮೂರ್ತಿ ಡಾ.ಎಚ್.ಬಿ. ಪ್ರಭಾಕರಶಾಸ್ತ್ರಿ, ನ್ಯಾಯಮೂರ್ತಿ ಕೆ.ಎಸ್.ಮುದಗಲ್, ಧಾರವಾಡ ಪೀಠದ ಅಧಿಕ ಮಹಾ
ವಿಲೇಖನಾಧಿಕಾರಿ ಎಸ್.ವೈ.ವಟವಟಿ, ಹೈಕೋರ್ಟ್ ಅಡ್ವೊಕೇಟ್ಸ್ ಲಾ ಸೊಸೈಟಿ ಅಧ್ಯಕ್ಷ ಸಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯ್ತಿ ಸಿಇಒ ಸ್ನೇಹಲ್ ರಾಯಮಾನೆ, ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಪ್ರೊ. ಸಿ.ಎಸ್.ಪಾಟೀಲ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.