ನರಗುಂದ: ಪಟ್ಟಣದಲ್ಲಿನ ಶಿವಾಜಿ ವೃತ್ತದಲ್ಲಿನ ಬ್ಯಾನರ್ನಲ್ಲಿದ್ದ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಶನಿವಾರ ರಾತ್ರಿ ಕಿಡಿಗೇಡಿಗಳು ಹರಿದು ಹಾಕಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕದ ಸದಸ್ಯರು ಭಾನುವಾರ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿದರು. ಇದರಿಂದ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು.
ಪಟ್ಟಣದಲ್ಲಿ ನೂರಾರು ಸದಸ್ಯರೊಡನೆ ಪ್ರತಿಭಟನೆ ನಡೆಸಿದ ದಲಿತ ಮುಖಂಡರು ಈ ಕಿಡಿಗೇಡಿಗಳನ್ನು ಬಂಧಿಸಬೇಕು, ಈ ಘಟನೆ ತೀವ್ರ ಖಂಡನೀಯ. ಪೊಲೀಸರು ಇದರ ಬಗ್ಗೆ ತ್ವರಿತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಟವರ್ ಮೇಲಿನ ನೀಲಿ ಧ್ವಜ ತೆರವುಗೊಳಿಸಿ ಕೇಸರಿ ಧ್ವಜವನ್ನು ಏರಿಸಿದ್ದಾರೆ, ಜತೆಗೆ ನೀಲಿ ಧ್ವಜವನ್ನು ಸುಟ್ಟು ಹಾಕಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಎಸ್ಎಸ್ ಸಂಘಟನೆ ತಾಲ್ಲೂಕು ಅಧ್ಯಕ್ಷ ರವಿ ಪೂಜಾರ ಮಾತನಾಡಿ ಶನಿವಾರ ಮಧ್ಯ ರಾತ್ರಿ ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಇದರ ಬಗ್ಗೆ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಚಿತ್ರೀಕರಣವಾಗಿದ್ದು, ಮೂವರು ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ್ದಾರೆ. ಈಗಾಗಲೇ ಶನಿವಾರ ರಾತ್ರೋ ರಾತ್ರಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರಿಗೆ ದೂರು ನೀಡಲಾಗಿದೆ.
ಡಿಎಸ್ಪಿ, ಸಿಪಿಐ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ. ಮತ್ತೇ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು. ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದೆ ಎಂದರು.
ಪ್ರತಿಭಟನೆಯಲ್ಲಿ ಧರ್ಮರಾಜ ರಂಗಣ್ಣವರ, ಡಾ.ಎಚ್.ಆರ್. ಹಿರೇಹಾಳ, ವಿನೋದ ಒಡ್ಡರ, ಗುರು ದೊಡಮನಿ, ವಿಜಯ ಚಲವಾದಿ, ಯಶವಂತ ನಡುವಿನಮನಿ, ರಾಮು ನರಗುಂದ, ಬಸು ಸೇರಿದಂತೆ ಡಿಎಸ್ಎಸ್ ಮುಖಂಡರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.