ಗದಗ: ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಶ್ರೀರಾಮಸೇನೆ, ಜನಕಲ್ಯಾಣ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಭಾನುವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ನರಗುಂದ, ನವಲಗುಂದದಲ್ಲಿ ನಡೆಯುತ್ತಿರುವ ಮಹದಾಯಿ ಹೋರಾಟ ಎರಡು ವರ್ಷ ಪೂರೈಸಿದರೂ, ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಲೇ ಹೋರಾಟದ ಮೂಲ ಉದ್ದೇಶ ಈಡೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
‘ಮಹದಾಯಿ ನೀರಿಗಾಗಿ ಕಳೆದ ಮೂರೂವರೆ ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ಈ ಭಾಗದ ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀರಿನ ವಿಚಾರದಲ್ಲೂ ರಾಜಕೀಯ ಮಾಡುತ್ತಿವೆ’ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಶ್ರೀರಾಮಸೇನೆ ಜಿಲ್ಲಾ ಸಂಚಾಲಕ ರಾಜು ಖಾನಪ್ಪನವರ, ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ಯಲ್ಲಪ್ಪ ಗೋಕಾಕ, ದಲಿತ ಸಂಘಟನೆಯ ರವಿ ಕರಬಸಣ್ಣವರ, ವಿಶ್ವನಾಥ ಅಂಗಡಿ, ಪ್ರಕಾಶ ಗುಜರಾತಿ, ಶಾಮಿಯಾನ ಸಂಘದ ರವಿಬಾಬು ಮೆಣಸಿನಕಾಯಿ, ಸುರೇಶ ಕಲಬುರ್ಗಿ, ಕುಮಾರ ಕಡಕೋಳ, ರೈತ ಘಟಕದ ಸುರೇಶ ಹೆಬಸೂರ ಹಾಗೂ ಜನಕಲ್ಯಾಣ ವೇದಿಕೆ ಸಂಘದ ರಾಜ್ಯಾಧ್ಯಕ್ಷ ಅಮರೇಶ್ವರ ಬೂದಿಹಾಳ, ಪ್ರಧಾನ ಕಾರ್ಯದರ್ಶಿ ಎಸ್.ವಿ.ನೇಗಲಿ, ಉಪಾಧ್ಯಕ್ಷ ವಿ.ಎಚ್. ದೇಸಾಯಿಗೌಡ್ರ, ತಾಲ್ಲೂಕು ಅಧ್ಯಕ್ಷ ಸಿ.ಕೆ. ಕನ್ನ್ಯಾಳ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.