ADVERTISEMENT

ಬಹುಗ್ರಾಮ ನೀರಿನ ಯೋಜನೆ ಜಾರಿ ಶೀಘ್ರ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2017, 6:48 IST
Last Updated 13 ನವೆಂಬರ್ 2017, 6:48 IST

ಮುಳಗುಂದ: ಗದಗ ಜಿಲ್ಲೆಯ ಎಲ್ಲ ಗ್ರಾಮಗಳಿಗೂ ನದಿಯಿಂದ ಕುಡಿಯುವ ನೀರು ಪೂರೈಸುವ ₹ 1,049 ಕೋಟಿ ಮೊತ್ತದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಶೇ 95ರಷ್ಟು ಪೂರ್ಣಗೊಂಡಿದ್ದು, ಜನವರಿ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸಮೀಪದ ಯಲಿಶಿರೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ನಡೆದಿದೆ. ಬಡರಿಗೆ ಅನ್ನಭಾಗ್ಯ, ಮಕ್ಕಳಿಗೆ ಕ್ಷೀರಭಾಗ್ಯ, ರೈತರಿಗೆ ಕೃಷಿಭಾಗ್ಯ ಹೀಗೆ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಜ್ಯ ಅಭಿವೃದ್ಧಿ ಪಥದಲ್ಲಿ ಮುನ್ನಡೆದಿದೆ ಎಂದರು.

ಇದಕ್ಕೂ ಮುನ್ನ ಸಚಿವರು ಗ್ರಾಮದಲ್ಲಿ ₹ 56 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ದಂಡವ್ವ ನಾಗಪ್ಪ ಯಲಿ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ, ಈಶ್ವರ ಸಮುದಾಯ ಭವನ, ಅಂಬೇಡ್ಕರ ಸಮುದಾಯ ಭವನಗಳನ್ನು ಉದ್ಘಾಟಿಸಿದರು. ದ್ಯಾಮವ್ವ ದೇವಿ, ಕೊಟ್ಟೂರು ಬಸವೇಶ್ವರ ಸಮುದಾಯ ಭವನಗಳ ನಿರ್ಮಾಣಕ್ಕೆ ಚಾಲನೆ ನೀಡಿದರು. ಬಳಿಕ ಅನಿಲ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್, ಸ್ಟವ್ ವಿತರಿಸಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಎ.ಆರ್.ನದಾಫ, ಜಿಲ್ಲಾ ಪಂಚಾಯಿತಿ ಸದಸ್ಯ ಹನಮಂತಪ್ಪ ಪೂಜಾರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ಗಂಗಾಧರಯ್ಯ ಹೀರೆಮಠ, ಚಂದ್ರಪ್ಪ ಕಪ್ಪತನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.