ADVERTISEMENT

‘ಭ್ರಷ್ಟಾಚಾರದಲ್ಲಿ ಮುಳುಗಿದ ಸರ್ಕಾರ’

ರಾಜ್ಯ ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2017, 5:15 IST
Last Updated 21 ಫೆಬ್ರುವರಿ 2017, 5:15 IST
ಗದುಗಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದರು.
ಗದುಗಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದರು.   
ಗದಗ: ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಗದುಗಿನ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು. 
 
ಭ್ರಷ್ಟಾಚಾರ ಕಳಂಕವಿಲ್ಲದೇ ರಾಜ್ಯ ಸರ್ಕಾರದ ಯಾವುದೇ ತೀರ್ಮಾನ ಕೈಗೊಳ್ಳುವಂತಿಲ್ಲ ಎಂಬ ಪರಿಸ್ಥಿತಿ ಬಂದಿದೆ. ಇದಕ್ಕೆ ಪುರಾವೆ ಎನ್ನುವಂತೆ ಇತ್ತೀಚೆಗೆ ಐದು ವ್ಯಕ್ತಿಗಳ ಮನೆಗಳ ಮೇಲೆ ಆದಾಯ ತೆರಿಗೆ ಮತ್ತು ಜಾರಿ  ನಿರ್ದೇಶನಾಲಯದ ದಾಳಿ ನಡೆದಿದೆ. ರಾಜ್ಯ ಸರ್ಕಾರ ಸಂಪೂರ್ಣ  ಭ್ರಷ್ಟತೆಯ ಕೂಪದಲ್ಲಿ  ಬಿದ್ದಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಆರೋಪಿಸಿದರು. 
 
ಮುಖ್ಯಮಂತ್ರಿಗಳಿಗೆ ಆಪ್ತರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜ್ ಅವರ ನಿವಾಸದ ಮೇಲೆ  ನಡೆದ ದಾಳಿಯ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾದ ಡೈರಿಯಲ್ಲಿ ಉಕ್ಕಿನ ಸೇತುವೆ ಯೋಜನೆಗಾಗಿ ಕಾಂಗ್ರೆಸ್ ಸರ್ಕಾರಕ್ಕೆ  ಸಂದಾಯವಾದ ಲಂಚದ ಪ್ರಸ್ತಾಪವಿರುವುದು ವರದಿಯಾಗಿದೆ. ಸಾಕಷ್ಟು ಪ್ರಕರಣದಲ್ಲಿ ಯಾರನ್ನೋ ರಕ್ಷಿಸಲು ಮತ್ತು ವಿಷಯಗಳನ್ನು ಮುಚ್ಚಿಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. 
 
ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ತಕ್ಷಣ ವಜಾ ಮಾಡಬೇಕು, ಮೇಲ್ನೋಟಕ್ಕೆ ಹಣಕಾಸು ಅಕ್ರಮ ಎಸಗಿರುವುದು  ಸಾಬೀತಾಗಿ ರುವುದರಿಂದ ಇಬ್ಬರು   ಕಾಂಗ್ರೆಸ್ ಶಾಸಕರಿಗೆ ನೋಟಿಸ್ ಜಾರಿ ಮಾಡಿ  ಅವರನ್ನು ಶಾಸಕಾಂಗ ಪಕ್ಷದಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದರು.
ಎಲ್ಲಾ  ಪ್ರಕರಣಗಳ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ  ಆದೇಶಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ಮನೋಜ್‌ ಜೈನ್‌ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
 
ವಿಧಾನ ಪರಿಷತ್‌ ಸದಸ್ಯ ಎಸ್‌.ವಿ ಸಂಕನೂರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಸಿ ಪಾಟೀಲ, ಮಾಜಿ ಶಾಸಕ ಕಳಕಪ್ಪ ಬಂಡಿ, ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ ಪ್ರಧಾನ ಕಾರ್ಯದರ್ಶಿ ಮೋಹನ ಮಾಳಶೆಟ್ಟಿ ಇದ್ದರು.
 
***
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಕಾಂಗ್ರೆಸ್‌ ಸರ್ಕಾರ ಭ್ರಷ್ಟಾಚಾರ, ಗೂಂಡಾಗಿರಿ ನಡೆಸುತ್ತಿದೆ
- ಎಸ್‌.ವಿ ಸಂಕನೂರ
ವಿಧಾನಪರಿಷತ್‌ ಸದಸ್ಯ

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.