ADVERTISEMENT

ಮಹದಾಯಿ ಜಾರಿಗೆ ಸ್ಪಂದಿಸದ ರಾಜಕಾರಣಿಗಳ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2017, 10:06 IST
Last Updated 17 ನವೆಂಬರ್ 2017, 10:06 IST
ನರಗುಂದದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 855ನೇ ದಿನ ಗುರುವಾರ ಮಹದಾಯಿ ಹೋರಾಟ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಮಾತನಾಡಿದರು
ನರಗುಂದದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 855ನೇ ದಿನ ಗುರುವಾರ ಮಹದಾಯಿ ಹೋರಾಟ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಮಾತನಾಡಿದರು   

ನರಗುಂದ: ‘ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ಮಹದಾಯಿ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ತೋರುತ್ತಿವೆ’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ರಮೇಶ ನಾಯ್ಕರ ಅವರು ಆರೋಪಿಸಿದರು. ಪಟ್ಟಣದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 855ನೇ ದಿನ ಗುರುವಾರ ಅವರು ಮಾತನಾಡಿದರು.

‘ಗೋವಾದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈ ಯೋಜನೆಗೆ ಗೋವಾ ಸರ್ಕಾರದ ತಗಾದೆ ಹೆಚ್ಚಾಗಿದೆ. ಅದನ್ನು ಕಡಿಮೆ ಗೊಳಿಸಿ, ನಮ್ಮ ರೈತರ ಆಶೋತ್ತರ ಈಡೇರಬೇಕಾದರೆ, ಬಿಜೆಪಿ ನಾಯಕರ ಹೆಚ್ಚಿನ ಪ್ರಯತ್ನ ನಡೆಯಬೇಕು.

ಈಗಾಗಲೇ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಡಿ. 15ರವರೆಗೆ ಕಾಯಲಾಗುವುದು. ಗೋವಾದಲ್ಲಿ ಕಾಂಗ್ರೆಸ್ಸಿಗರು ವಿರೋಧ ಮಾಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಮುಂದಾಗಬೇಕು. ಮಹದಾಯಿಗೆ ರಾಜಕೀಯ ಪಕ್ಷಗಳು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಬಿಜೆಪಿ ನುಡಿದಂತೆ ನಡೆದರೆ, ರೈತರ ಬದುಕು ಹಸನಾಗುತ್ತದೆ. ರಾಜಕೀಯ ಪಕ್ಷಗಳು ಈ ಹೋರಾಟವನ್ನು ಲಘುವಾಗಿ ಪರಿಗಣಿಸದೇ ರೈತರ ಆಶೋತ್ತರಗಳಿಗೆ ಸ್ಪಂದಿಸಬೇಕು’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಹೇಳಿದರು.

ಎಸ್‌.ಕೆ.ಗಿರಿಯಣ್ಣವರ, ಸಿದ್ದಪ್ಪ ಚಂದ್ರತ್ನವರ, ಅರ್ಜುನ ಮಾನೆ, ವೆಂಕಪ್ಪ ಹುಜರತ್ತಿ, ಹುಲಜೋಗಿ, ಎಸ್‌.ಬಿ.ಜೋಗಣ್ಣವರ, ಕಾಡಪ್ಪ ಕಾಕನೂರು, ಚನ್ನಬಸವ್ವ ಆಯಟ್ಟಿ, ಯಲ್ಲಪ್ಪ ಗುಡದೇರಿ ಧರಣಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.