ರೋಣ: ಬೋಯಿ ಸಮಾಜಕ್ಕೆ ಪರಿಶಿಷ್ಟ ಜಾತಿಯ ಪ್ರಮಾಣಪತ್ರ ನೀಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ತಾಲ್ಲೂಕಿನ ಇಟಗಿ ಗ್ರಾಮದ ನಿವಾಸಿ ಯಲ್ಲಪ್ಪ ಬೋಯಿ ಮಂಗಳವಾರ ತಹಶೀಲ್ದಾರ್ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.
ಬೋಯಿ ಸಮಾಜಕ್ಕೆ ಪರಿಶಿಷ್ಟಜಾತಿ ಪ್ರಮಾಣಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಮಾಜದ ಮುಖಂಡರು ತಹಶೀಲ್ದಾರರನ್ನು ಭೇಟಿ ಮಾಡಿ ಪ್ರಮಾಣಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಆಗ ತಹಶೀಲ್ದಾರ್ ಶಿವಲಿಂಗ ಪ್ರಭುವಾಲಿ, ‘ಸರ್ಕಾರದ ಆದೇಶದಂತೆ ಬೋಯಿ ಸಮಾಜ ಪ್ರವರ್ಗ 1ರಲ್ಲಿ ಇದ್ದು, ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಬರುವುದಿಲ್ಲ’ ಎಂದು ಹೇಳಿದರು.
ಇದರಿಂದ ಅಸಮಾಧಾನಗೊಂಡ ಯಲ್ಲಪ್ಪ ಬೋಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ತಹಶೀಲ್ದಾರ್, ‘ಸರ್ಕಾರದ ನಿಯಮಾವಳಿಯಂತೆ ‘ಭೋವಿ’ ಜನಾಂಗ ಪರಿಶಿಷ್ಟ ಜಾತಿಗೆ ಸೇರಿದೆ. ಆದ್ದರಿಂದ, ‘ಬೋಯಿ’ ಜನಾಂಗದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಲು ಬರುವುದಿಲ್ಲ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.