ಲಕ್ಷ್ಮೇಶ್ವರ: ಜಿಲ್ಲೆಯನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸಲು ಜಿಲ್ಲಾಡಳಿತ ಅವಿರತವಾಗಿ ಶ್ರಮಿಸುತ್ತಿದೆ. ಆದರೆ, ಬಹಳಷ್ಟು ಗ್ರಾಮಗಳಲ್ಲಿ ಗ್ರಾಮಸ್ಥರು ಶೌಚಾಲಯಿದ್ದರೂ ಅದನ್ನು ಬಳಸುತ್ತಿಲ್ಲ. ಬೆಳಗಾದರೆ ತಂಬಿಗೆ ಹಿಡಿದು ಬಯಲಿನತ್ತ ಹೆಜ್ಜೆ ಹಾಕುತ್ತಾರೆ. ಶಿರಹಟ್ಟಿ ತಾಲ್ಲೂಕಿನ ಕೊನೆಯ ಗ್ರಾಮ ಬಸಾಪುರ ಇದಕ್ಕೆ ತಾಜಾ ಉದಾಹರಣೆ.
ರಾಮಗಿರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರದಲ್ಲಿ ಬಹುತೇಕ ಎಲ್ಲರ ಮನೆಗಳಲ್ಲಿ ವೈಯಕ್ತಿಕ ಶೌಚಾಲಯಗಳು ನಿರ್ಮಾಣಗೊಂಡಿವೆ. ಆದರೆ, ಅವುಗಳನ್ನು ಗ್ರಾಮಸ್ಥರು ಉಪಯೋಗಿಸುತ್ತಿಲ್ಲ. ಗ್ರಾಮದೊಳಗೆ ಪ್ರವೇಶಿಸುವ ರಸ್ತೆಯ ಇಕ್ಕೆಲಗಳಲ್ಲೇ ಶೌಚಕ್ರಿಯೆ ನಡೆಯುತ್ತದೆ.
ಇದೇ ರಸ್ತೆಗೆ ಹೊಂದಿಕೊಂಡಂತೆ ಗ್ರಾಮದ ಪುರಾತನ ಕೆರೆಯೂ ಇದೆ. ‘ಸ್ವಚ್ಛ ಭಾರತ ಯೋಜನೆಯಡಿ ಸಾಕಷ್ಟು ಅನುದಾನ ಬರುತ್ತದೆ. ಆದರೆ ಗ್ರಾಮಸ್ಥರು ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಶೌಚಾಲಯಗಳನ್ನು ಉಪಯೋಗಿಸ್ರೀ ಅಂತಾ ನಾವೂ ಹೇಳೇವ್ರೀ, ಆದ್ರೆ ಅವರ ತಲೆಯೊಳಗೆ ಹೋಗ್ತಿಲ್ಲ’ ಎಂದು ಹೆಸರು ಹೇಳಲು ಬಯಸದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹೇಳಿದರು.
‘ಅಧಿಕಾರಿಗಳು ಈ ಗ್ರಾಮಕ್ಕೆ ಬಂದು ಗ್ರಾಮಸ್ಥರಿಗೆ ಬಯಲು ಶೌಚದಿಂದ ಆಗುವ ಹಾನಿ ಮತ್ತು ಶೌಚಾಲಯ ಬಳಕೆ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಅವರು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.