ಹಾಸನ: ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ತಾಲ್ಲೂಕಿನ ಕಟ್ಟಾಯ ಹೋಬಳಿ ಶಂಕರನಹಳ್ಳಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದರು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ವಿವಿಧ ಸಮುದಾಯದ ಸುಮಾರು 250ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಅವರಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರು ಹೆಚ್ಚು ಇದ್ದಾರೆ. ಇತ್ತೀಚೆಗೆ ಗ್ರಾಮದ ರಂಗಸ್ವಾಮಿ, ರಾಣಿ, ಶೇಷೇಗೌಡ, ರಾಮಸ್ವಾಮಿ, ಅನಂತ, ಮಂಜ, ಅಣ್ಣಪ್ಪ ಎಂಬುವರು ತಮ್ಮ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಗ್ರಾಮದಲ್ಲಿ ನೆಮ್ಮದಿ ಹಾಳಾಗಿದೆ. ಗಂಡಸರು ಬೆಳಗ್ಗೆಯಿಂದ ಸಂಜೆವರೆಗೂ ಮದ್ಯಪಾನ ಮಾಡಿಕೊಂಡು ರಸ್ತೆಯಲ್ಲಿ ತಿರುಗಾಡುವ ಮಹಿಳೆಯರು, ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ. ಇದರಿಂದ ಅವರು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ಅಳಲು ತೋಡಿಕೊಂಡರು.
ಅಕ್ರಮ ಮದ್ಯ ಮಾರಾಟದಿಂದ ಗ್ರಾಮದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ, ಜತೆಗೆ ಹಲವು ಕುಟುಂಬಗಳು ಬೀದಿ ಪಾಲಾಗುತ್ತಿವೆ. ಮದ್ಯ ಸೇವನೆಗಾಗಿ ಗಂಡಸರು ಮನೆಯಲ್ಲಿದ್ದ ಸಾಮಾನುಗಳನ್ನು ಕಳ್ಳತನ ಮಾಡುತ್ತಿದ್ದಾರೆ ಎಂದು ದೂರಿದರು.
ಮದ್ಯ ಮಾರಾಟ ಮಾಡದಂತೆ ಅಂಗಡಿ ಮಾಲೀಕರಿಗೆ ತಿಳಿ ಹೇಳಿದ್ದರೂ ನಿಲ್ಲಿಸಿಲ್ಲ. ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಡಿವಾಣ ಹಾಕಬೇಕು. ತಪ್ಪಿತಸ್ಥರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮಸ್ಥರಾದ ಮಂಜುಳಾ, ಲಕ್ಷ್ಮಿ, ಪಲ್ಲವಿ, ದೇವಮ್ಮ, ಪ್ರೇಮ, ಮಂಜುನಾಥ್, ಪ್ರಕಾಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.