ಹಾಸನ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅಂಗೀಕರಿಸಲು ಆಗ್ರಹಿಸಿ ನ. 15ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ ಸಂಘಟನಾ ಸಂಚಾಲಕ ಸತ್ಯ ಹೇಳಿದರು.
ನಗರದ ಮಾನವ ಬಂಧುತ್ವ ವೇದಿಕೆ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ಕೈಗಾರಿಕ ಕ್ಷೇತ್ರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಪಾಲುಗಾರಿಕೆಯನ್ನು ಕಲ್ಪಿಸಿ, ಪ್ರಗತಿಯ ತಾರತಮ್ಯ ಸರಿಪಡಿಸಲು ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವರದಿ ನೀಡಲಾಗಿದೆ ಎಂದರು.
ಬೆಳಗಾವಿ ಅಧಿವೇಶನದಲ್ಲಿ ಆಯೋಗದ ವರದಿಯನ್ನು ಯಥವತ್ತಾಗಿ ಅಂಗೀಕರಿಸಿ ಅನುಮೋದನೆಗೆ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ದಲಿತರ ಆರ್ಥಿಕ ಅಭಿವೃದ್ಧಿಗೆ ಮೀಸಲಿರುವ ಎಸ್.ಸಿ, ಎಸ್.ಟಿ.ಪಿ. ಮತ್ತು ಗುತ್ತಿಗೆ ವಿಶೇಷ ಘಟಕ ಯೋಜನೆಯ ಅನುದಾನವನ್ನು ಕ್ಷೇತ್ರವಾರು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಭೂ ಮಂಜೂರಾತಿಗೆ ಅರ್ಜಿ ಸಲ್ಲಿಸಿರುವ ಎಲ್ಲಾ ದಲಿತ ಕುಟುಂಬಗಳಿಗೆ ಭೂ ಮಂಜೂರಾತಿ ನೀಡಬೇಕು ಹಾಗೂ ಶೇ 25 ರಷ್ಟು ಭೂಮಿ ಮೀಸಲಿಡಬೇಕು ಎಂದರು.
ರಾಜ್ಯದಲ್ಲಿ ದಲಿತರ ಪರ ಹೋರಾಟ ಮಾಡಿದ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕುಎಂದು ಅವರು ಆಗ್ರಹಪಡಿಸಿದರು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ₹ 2000 ಮತ್ತು ಮೆಟ್ರಿಕ್ ನಂತರದ ಮಕ್ಕಳಿಗೆ ₹ 2500 ಊಟದ ಭತ್ಯೆ ಹೆಚ್ಚಿಸಬೇಕು ಹಾಗೂ ಸರ್ಕಾರಿ ಕಟ್ಟಡಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಸಭೆಯಲ್ಲಿ ಉಡುಪಿ ವಿಭಾಗದ ಸಂಚಾಲಕ ಶೇಖರ್, ತರಿಕೆರೆ ವಿಭಾಗ ಸಂಚಾಲಕ ವೆಂಕಟೇಶ್, ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ, ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಸ್.ಎನ್. ಮಲ್ಲಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.