ಸಕಲೇಶಪುರ: ತಾಲ್ಲೂಕಿನಲ್ಲಿ ಪ್ರಗತಿಯಲ್ಲಿರುವ ಎತ್ತಿನಹೊಳೆ ತಿರುವು ಯೋಜನೆ ಕಾಮಗಾರಿ ಸ್ಥಳಗಳಿಗೆ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸುಮಾರು 200 ರೈತರು ಭೇಟಿ ಶನಿವಾರ ನೀಡಿ ಕಾಮಗಾರಿ ವೀಕ್ಷಿಸಿದರು.ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶ, ಕೋಲಾರ ಭಾಗದ ರೈತರೂ ಕಾಮಗಾರಿ ಸ್ಥಳಕ್ಕೆ ತೆರಳಿ, ಎತ್ತಿನಹೊಳೆಯ ಸಾಧಕ ಬಾಧಕಗಳನ್ನು ತಿಳಿದುಕೊಂಡರು.
ಕೋಡಿಹಳ್ಳಿ ಚಂದ್ರಶೇಖರ್ ಮಾತ ನಾಡಿ, ಬಯಲು ಸೀಮೆ ಜಿಲ್ಲೆಗಳಿಗೆ ಕುಡಿ ಯುವ ನೀರು ಹರಿಸುವ ಈ ಯೋಜನೆ ಪ್ರಗತಿಯಲ್ಲಿದೆ. ಆದರೆ ಉದ್ದೇಶಿತ ಕಾಮಗಾರಿ ಪೂರ್ಣವಾಗಿಲ್ಲ ಎಂದರು.ಡಿಸೆಂಬರ್ ಅಂತ್ಯದ ಒಳಗೆ ಎತ್ತಿನಹೊಳೆ ಯೋಜನೆಯಿಂದ ಪ್ರಾಯೋಗಿಕವಾಗಿ ನೀರು ಹರಿಸುವು ದಾಗಿ ಜಲ ಸಂಪನ್ಮೂಲ ಸಚಿವರು ಭರವಸೆ ನೀಡಿದ್ದಾರೆ. ಆದರೆ ಈ ಭಾಗದಲ್ಲಿ ಯೋಜನೆಗೆ ಭೂಮಿ ಕಳೆದುಕೊಳ್ಳುವ ರೈತರಿಗೆ ಈ ವರೆಗೆ ಪರಿಹಾರ ನೀಡಿಲ್ಲ. ಇಂಥ ಬೃಹತ್ ಯೋಜನೆ ಕೈಗೆತ್ತಿಕೊಳ್ಳುವಾಗ, ತರಾತುರಿ ಕ್ರಮ ಸರಿಯಲ್ಲ. ಭೂಮಿ ಕಳೆದುಕೊಂಡು ನೀರು ಕೊಡುತ್ತಿರುವ ಮಲೆನಾಡಿನ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಅವರಿಗೆ ಸಮಾಧಾನ ಆಗುವಂತಹ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಎತ್ತಿನಹೋಳೆ ನೀರನ್ನೇ ನೀಡಿ ಎಂದು ಬೇಡಿಕೆ ಇಟ್ಟಿರಲಿಲ್ಲ. ಕುಡಿಯಲು ನೀರು ಕೇಳಿದ್ದೆವು. ಸರ್ಕಾರ ಈ ಯೋಜನೆ ಮೂಲಕ ನೀರು ನೀಡಲು ಮುಂದಾಗಿದೆ ಎಂದರು. ಹಸಿರು ಸೇನೆ ರಾಜ್ಯ ಮುಖಂಡ ಮಹಮ್ಮದ್ ಸಾದೀಕ್, ರೈತ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಶಿವಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.