ಚನ್ನರಾಯಪಟ್ಟಣ: ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಅಸಮಾಧಾನ ವ್ಯಕ್ತಪಡಿಸಿದರು. ತಾಲ್ಲೂಕಿಗೆ ಸೋಮವಾರ ಮುಖ್ಯಮಂತ್ರಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು.ಸಭೆಯು ಆರಂಭವಾಗುತ್ತಿದ್ದಂತೆ ನಾಯಕರ ನಡವಳಿಕೆ ಕುರಿತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ಕಾರ್ಯಕರ್ತರ ಮಾತಿಗೆ ಮನ್ನಣೆ ಇಲ್ಲ. ಪಕ್ಷ ಸಂಘಟನೆಗೆ ಕಾರ್ಯಕರ್ತರು ಬೇಕು. ಆದರೆ ಕಷ್ಟಕ್ಕೆ ಸ್ಪಂದನೆ ಸಿಗುತ್ತಿಲ್ಲ. ನಾಯಕರ ಅಸಡ್ಡೆಯಿಂದ ಕಾರ್ಯಕರ್ತರು ಬೀದಿಗೆ ಬರುವಂತಾಗಿದೆ ಎಂದು ದೂರಿದರು.
ಅಭಿವೃದ್ಧಿಗೆ ಸ್ಪಂದಿಸದ ಅಧಿಕಾರಿಗಳ ಎತ್ತಂಗಡಿಗೆ ಉಸ್ತುವಾರಿ ಸಚಿವ ಎ.ಮಂಜು, ವಿಧಾನಪರಿಷತ್ತಿನ ಸದಸ್ಯ ಎಂ.ಎ. ಗೋಪಾಲಸ್ವಾಮಿ ಕ್ರಮ ತೆಗೆದು ಕೊಳ್ಳುತ್ತಿಲ್ಲ ಎಂದು ದೂರಿದರು.ಉಸ್ತುವಾರಿ ಸಚಿವರು ಸಭೆಗೆ ಯಾವಾಗ ಬರುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ಆಕ್ರೋಶಿತ ಕಾರ್ಯಕರ್ತರನ್ನು ಮುಖಂಡರು ಸಮಾಧಾನ ಮಾಡಿದರು.
ಆರೋಗ್ಯ ಸರಿಯಿಲ್ಲ: ‘ಉಸ್ತುವಾರಿ ಸಚಿವರಿಗೆ ಆರೋಗ್ಯ ಸರಿ ಇಲ್ಲ. ಚಿಕಿತ್ಸೆ ಪಡೆದು ಸಂಜೆ ಪಟ್ಟಣಕ್ಕೆ ಬರುತ್ತಾರೆ’ ಎಂದು ವಿಧಾನಪರಿಷತ್ತಿನ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಜಿಲ್ಲೆಯ ಹೊಳೆನರಸೀಪುರ, ಚನ್ನರಾಯ ಪಟ್ಟಣ ತಾಲ್ಲೂಕಿನಲ್ಲಿ ನ್ಯಾಯದ ಪರ ದನಿ ಎತ್ತುವರನ್ನು ಹತ್ತಿಕ್ಕಲಾಗುತ್ತಿದೆ. ಪಿಡಿಒಗಳು ತಾರತಮ್ಯ ಎಸಗು ತ್ತಿದ್ದಾರೆ. ಸಮಸ್ಯೆಯನ್ನು ಸಚಿವರ ಗಮನಕ್ಕೂ ತಂದರೂ ಬಗೆಹರಿದಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.