ADVERTISEMENT

ರೈತರ ಸಾಲಮನ್ನಾ ಮಾಡಿ: ಸರ್ಕಾರಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 9:27 IST
Last Updated 20 ಮಾರ್ಚ್ 2017, 9:27 IST

ಅರಸೀಕೆರೆ: ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಬರಗಾಲ ಎದುರಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರೈತರ ಸಾಲಮನ್ನಾ ಮಾಡಬೇಕು ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ದೇಶೀಕೇಂದ್ರ ಸ್ವಾಮೀಜಿ ಒತ್ತಾಯಿಸಿದರು.

ತಾಲ್ಲೂಕಿನ ಬಂಡೀಹಳ್ಳಿ ಗ್ರಾಮದ ರೇವಣಸಿದ್ದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ರೇಣುಕ ಜಯಂತಿ ಯುಗಮಾನೋತ್ಸವ ಮತ್ತು ಧಾರ್ಮಿಕ ಜಾಗೃತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ವರ್ಷ ಮಲೆನಾಡಿನಲ್ಲಿಯೇ ಮಳೆ ಪ್ರಮಾಣ ಕಡಿಮೆಯಾಗಿ, ಜನರು ಕುಡಿಯುವ ನೀರಿಗೆ ಪರದಾಡುತ್ತಿದ್ದಾರೆ. ಕಾಫಿ ಗಿಡಗಳು ತೇವಾಂಶವಿಲ್ಲದೆ ಒಣಗುತ್ತಿವೆ. ಬಯಲು ಸೀಮೆ ಪ್ರದೇಶದ ಜನರ ಜೀವನ ಇದಕ್ಕಿಂತಲೂ ಕಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಸರ್ಕಾರಗಳು ಮತಗಳಿಕೆಗೋಸ್ಕರ ಪ್ರಚಾರ ಹಾಗೂ ನಿರರ್ಥಕ ಯೋಜನೆಗಳನ್ನು ಕೈಬಿಟ್ಟು, ರೈತರ ಹಿತ ಬಯಸುವ ನೀರಾವರಿ ಯೋಜನೆಗಳ ಮೂಲಕ ಕೆರೆ–ಕಟ್ಟೆಗಳನ್ನು ತುಂಬಿಸುವ ಕೆಲಸ ಮಾಡಬೇಕಿದೆ. ಬಹಳಷ್ಟು ರೈತರು ಬದುಕು ಸಾಗಿಸಲಾರದೆ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಆದ್ದರಿಂದ ಪಕ್ಷಬೇಧ ಮರೆತು ಶಾಸಕರು ಹಾಗೂ ಸಂಸದರು ಸರ್ಕಾರಕ್ಕೆ ಒತ್ತಡ ಹಾಕಿ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಬೇಕು ಎಂದರು.

ಕಾರ್ಯಕ್ರಮವನ್ನು ಎಡೆಯೂರು ಮಠದ ರೇಣುಕ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿ ಮಾತನಾಡಿದರು. ಜಿ.ಪಂ ಅಧ್ಯಕ್ಷೆ ಶ್ವೇತಾ ದೇವರಾಜ್‌, ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಗಂಜೀಗೆರೆ ಚಂದ್ರಶೇಖರ್‌, ಜಿ.ಪಂ ಮಾಜಿ ಅಧ್ಯಕ್ಷ ಗೀಜೀಹಳ್ಳಿ ಗುರುಸಿದ್ದಪ್ಪ, ಕೆ.ವಿ.ನಿರ್ವಾಣಸ್ವಾಮಿ, ನೊಣವಿನಕೆರೆ ಮಠದ ಕರಿವೃಷಭ ಶಿವ ಯೋಗೀ ಸ್ವಾಮೀಜಿ, ದೊಡ್ಡಗುಣಿ ಮಠದ ರೇವಣಸಿದ್ದೇಶ್ವರ ಸ್ವಾಮೀಜಿ, ಮಾಜಿ ಶಾಸಕರಾದ ಕೆ.ಪಿ.ಪ್ರಭುಕುಮಾರ್‌, ಜಿ.ಎಸ್‌.ಪರಮೇಶ್ವರಪ್ಪ, ತಿಪಟೂರು ರುದ್ರಮುನಿ ಸ್ವಾಮೀಜಿ, ಕುಪ್ಪೂರು ಗದ್ದಿಗೆ ಮಠದ ಡಾ.ಯತೀಶ ಶಿವಾ ಚಾರ್ಯ ಸ್ವಾಮೀಜಿ ಮಾತನಾಡಿದರು.

ಮಾಡಾಳು ಶಿವಬಸವ ಕುಮಾರಾಶ್ರಮದ ಅಭಿನವ ಶಿವಲಿಂಗ ಸ್ವಾಮೀಜಿ, ಡಿ.ಎಂ.ಕುರ್ಕೆ ಬೂದಿಹಾಲ್‌ ವಿರಕ್ತ ಮಠದ ಶಶಿಧರ ದೇವರು, ತಾ.ಪಂ ಸದಸ್ಯ ಬಸವಲಿಂಗಪ್ಪ, ಪುರ ಸಭಾ ಮಾಜಿ ಅಧ್ಯಕ್ಷ ಸಿದ್ದರಾಮಶೆಟ್ಟಿ, ಕೆ.ವಿ.ಎನ್‌.ಶಿವು, ಪ್ರವೀಣ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.