ಅರಸೀಕೆರೆ: ವಾಹನದಟ್ಟಣೆ ನಿಯಂತ್ರಿಸಲು ನಗರದ ಹೊರ ವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ವರ್ಷಾಂತ್ಯದಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯ (206) ಮರು ಡಾಂಬರೀಕರಣ ಕಾಮಗಾರಿಯನ್ನು ಮಂಗಳವಾರ ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಕಂತೇನಹಳ್ಳಿಯಿಂದ ಕೃಷ್ಣ ಕಲ್ಯಾಣ ಮಂಟಪದವರೆಗೆ 3.5 ಕಿ.ಮೀ ರಸ್ತೆಯನ್ನು ₹ 2 ಕೋಟಿ ವೆಚ್ಚದಲ್ಲಿ ಮರುಡಾಂಬರೀಕರಣ ಮಾಡ ಲಾಗುತ್ತಿದೆ. ಹೆದ್ದಾರಿಯಲ್ಲಿ ವಾಹನಗಳ ದಟ್ಟಣೆ ಹೆಚ್ಚಿದ್ದು, ಅಪಘಾತಗಳ ಪ್ರಮಾಣವೂ ಹೆಚ್ಚುತ್ತಿವೆ. ಇದನ್ನು ಮನಗಂಡು ನಗರದ ಹೊರವಲಯದಲ್ಲಿ ಬೈಪಾಸ್ ರಸ್ತೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.
‘ಬಿ.ಎಚ್.ರಸ್ತೆ ವಿಸ್ತರಣೆ ಮಾಡುವ ಪ್ರಸ್ತಾವ ಸಧ್ಯಕ್ಕೆ ಇಲ್ಲ. ಆದ್ದರಿಂದ ರಸ್ತೆ ಬದಿ ವ್ಯಾಪಾರಸ್ಥರು ಹಾಗೂ ಸ್ವಂತ ಕಟ್ಟಡ ಮಾಲೀಕರು ಆತಂಕ ಪಡುವ ಆಗತ್ಯವಿಲ್ಲ’ ಎಂದು ಹೇಳಿದರು. ನಗರಸಭೆ ಅಧ್ಯಕ್ಷ ಎಂ.ಸಮೀವುಲ್ಲಾ, ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ನಗರಸಭೆ ಸದಸ್ಯರಾದ ರಂಗನಾಥ್, ಬಾಲಮುರುಗನ್, ಬಬ್ರುವಾಹನ, ಸುರೇಶ್, ಹೆದ್ದಾರಿ ಇಲಾಖೆ ಎಂಜಿನಿಯರ್ ನಟೇಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.