ADVERTISEMENT

ವಿದ್ಯಾರ್ಥಿನಿಯರಿಗೆ ಎನ್‌ಸಿಇಆರ್‌ಟಿ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2017, 10:33 IST
Last Updated 9 ಜೂನ್ 2017, 10:33 IST

ಹಾಸನ: ಶಿಕ್ಷಣದಿಂದ ಮಾತ್ರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಸಾಧ್ಯ. ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಗುರುಗಳದ್ದಾಗಿದೆ ಎಂದು ಜಿಲ್ಲಾಧಿಕಾರಿ ವಿ.ಚೈತ್ರಾ ತಿಳಿಸಿದರು.

ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು (ವಿಭಜಿತ) ಸಭಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಗುರುವಾರ ಏರ್ಪಡಿಸಿದ್ದ  ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಎನ್.ಸಿ.ಇ.ಆರ್.ಟಿ ಪುಸ್ತಕ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ನಿರ್ದಿಷ್ಟ ಗುರಿ ಇರಬೇಕು ಮತ್ತು ಅದರ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ. ಎಲ್ಲರಲ್ಲೂ ಒಂದೊಂದು ರೀತಿಯ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸುವ ಕೆಲಸವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದರು.

ADVERTISEMENT

ಆಧುನಿಕ ಭಾರತದಲ್ಲಿ ಅವಕಾಶಗಳ ಹೆಬ್ಬಾಗಿಲು ತೆರೆದಿದೆ. ನೂರಾರು ಕ್ಷೇತ್ರಗಳಲ್ಲಿ ಭವಿಷ್ಯ ರೂಪಿಸಿಕೊಳ್ಳಬಹುದು. ತನ್ನ ಅಭಿರುಚಿಗೆ ತಕ್ಕಂತೆ ವೃತ್ತಿಯನ್ನು ಆಯೋಜಿಸಿ ಆಯ್ಕೆ ಮಾಡಿಕೊಳ್ಳುವ ಸಾಮರ್ಥ್ಯವನ್ನು   ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ರಾಜ್ಯ ಸರ್ಕಾರ ಕೌಶಲ ಕರ್ನಾಟಕ ಯೋಜನೆ ಜಾರಿಗೆ ತಂದಿದೆ. ಅದರಲ್ಲಿ ಸುಮಾರು 400 ಕ್ಕೂ ಅಧಿಕ ರೀತಿಯ ವೃತ್ತಿಗಳನ್ನು ಗುರುತಿಸಲಾಗಿದೆ. ಅದರಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಅವರವರ ಆಸಕ್ತಿಗೆ ಅನುಗುಣವಾಗಿ ವೃತ್ತಿ ಕೌಶಲ ತರಬೇತಿ ನೀಡುವುದರ ಜತೆಗೆ ಉದ್ಯೋಗಾವಕಾಶ ಸೃಷ್ಟಿಸಿಕೊಡಲಾಗುವುದು. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ತಾವು ಐಎಎಸ್ ಪದವಿಗೇರುವವರೆಗೆ ಶಿಕ್ಷಣದಲ್ಲಿ ಅನುಸರಿಸಿದ ಮಾರ್ಗ ಹಾಗೂ ಪೂರ್ವ ತಯಾರಿಗಳ ಬಗ್ಗೆ ಜಿಲ್ಲಾಧಿಕಾರಿ ಅನುಭವ ಹಂಚಿಕೊಂಡರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಆರ್. ಪುರುಷೋತ್ತಮ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯದೇವಯ್ಯ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುರೇಶ್  ಇದ್ದರು. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡದ ವಾಣಿಜ್ಯ, ಕಲಾ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಿಗೆ ಎನ್.ಸಿ.ಆರ್.ಟಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.