ಚನ್ನರಾಯಪಟ್ಟಣ: ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವದ ಸಂದರ್ಭದಲ್ಲಿ ಡೇರೆಗಳನ್ನು ನಿರ್ಮಿಸುವ ಜಾಗವನ್ನು ಸಮೀಕ್ಷೆ ಮಾಡಿ ಗುರುತಿಸಿದರೆ ಸೆಸ್ಕ್ ವಿದ್ಯುತ್ ಕಂಬ ಅಳವಡಿಸಲು ಅನುಕೂಲವಾಗುತ್ತದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಸೆಸ್ಕ್ ವತಿಯಿಂದ ಏರ್ಪಡಿಸಿದ್ದ ಸಲಹಾಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ‘ಈ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಅಗತ್ಯ ಮಾಹಿತಿ ನೀಡಬೇಕು. ಶ್ರವಣಬೆಳಗೊಳದಲ್ಲಿ ₹ 8 ಕೋಟಿ ವೆಚ್ಚದಲ್ಲಿ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದೆ’ ಎಂದರು.
ಎಂ.ದಾಸಾಪುರ ಗ್ರಾಮದ ಬಳಿ ವಿದ್ಯುತ್ ವಿತರಣಾ ಕೇಂದ್ರ ಆರಂಭಿಸಲಾಗುವುದು ಎಂದ ಅವರು, ಕಳೆದ ತಿಂಗಳು ಬಿದ್ದ ಮಳೆಯಿಂದಾಗಿ ತಾಲ್ಲೂಕಿನ ಕಸಬಾ, ಶ್ರವಣಬೆಳಗೊಳ ಹಾಗೂ ಉದಯಪುರ ಹೋಬಳಿಯ ಹಲವು ಕಡೆ 120 ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದವು. ಆ ಜಾಗದಲ್ಲಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು. ಕಾರ್ಯಪಾಲಕ ಎಂಜಿನಿಯರ್ ಆರ್.ರಾಮಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಯಪ್ಪ, ಅಧಿಕಾರಿ ಕೇಶವಮೂರ್ತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.