ADVERTISEMENT

ಸಕಾರಾತ್ಮಕ ಚಿಂತನೆಗೆ ಸಾಹಿತ್ಯ ಸಹಕಾರಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2017, 6:05 IST
Last Updated 16 ಜನವರಿ 2017, 6:05 IST
ಸಕಾರಾತ್ಮಕ ಚಿಂತನೆಗೆ ಸಾಹಿತ್ಯ ಸಹಕಾರಿ
ಸಕಾರಾತ್ಮಕ ಚಿಂತನೆಗೆ ಸಾಹಿತ್ಯ ಸಹಕಾರಿ   

ಹಾಸನ: ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆ ಹಾಗೂ ಉತ್ತಮ ವ್ಯಕ್ತಿತ್ವ ಬೆಳೆಯ ಬೇಕೆಂದರೆ ಅವರಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸುವುದೇ ಉತ್ತಮ ಪರಿಹಾರ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮತ್ತು ಆದಿಚುಂಚನಗಿರಿ ಸಂಸ್ಥಾನ ಮಠದ ವತಿಯಿಂದ ಫೆಬ್ರುವರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಮತ್ತು ವಿವಿಧ ಗೋಷ್ಠಿಗಳ ಅಧ್ಯಕ್ಷರ ಆಯ್ಕೆಗಾಗಿ ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿ ಸಿದ್ದ ರಾಜ್ಯ ಮಟ್ಟದ ಚರ್ಚಾಗೋಷ್ಠಿ ಉದ್ಘಾಟಿಸಿ ಮಾತನಾಡಿದರು.

ಸಾಹಿತ್ಯಕ್ಕೆ ಒಂದು ಪೀಳಿಗೆಯನ್ನು ಪ್ರಭಾವಿಸುವ ಶಕ್ತಿ ಇರುತ್ತದೆ. ಆದ್ದರಿಂದ ಸಾಹಿತ್ಯ ಎಂಬುದು ಆರೋಗ್ಯವಂತ ಸಮಾಜ ಮತ್ತು ದೇಶದ ಅವಿಭಾಜ್ಯ ಅಂಗವಾಗಬೇಕು. ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರಜಾಪ್ರಭುತ್ವದ ಅಡಿಪಾಯವಿದ್ದಂತೆ ಎಂದರು.

ಕನ್ನಡ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಗೂ 8 ಜ್ಞಾನಪೀಠ ಪ್ರಶಸ್ತಿ ಪಡೆದ ಶ್ರೀಮಂತ ಭಾಷೆ. ದಾರ್ಶನಿಕ ಸಾಹಿತಿಗಳನ್ನು ವಿಶ್ವಕ್ಕೆ ಕೊಡುಗೆಯಾಗಿ ಕೊಟ್ಟಿರುವ ಹೆಮ್ಮೆ ಕನ್ನಡಕ್ಕಿದೆ. ಈ ಪರಂಪರೆ ಮುಂದುವ ರೆಯಲು ಮಕ್ಕಳ ಸಾಹಿತ್ಯ ಸಮ್ಮೇಳನ  ಅಗತ್ಯ ಎಂದು ಪ್ರತಿಪಾದಿಸಿದರು.

ಬಾಲಗಂಗಾಧರನಾಥ ಸ್ವಾಮೀಜಿ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಿದ್ದರು. ಮಠವು ಈ ಪರಂಪರೆ ಮುಂದುವರೆಸಿ ಕೊಂಡು ಹೋಗುತ್ತಿದೆ. ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದು ಮಠಗಳ ಕರ್ತವ್ಯ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಎಸ್.ಪ್ರಕಾಶ್ ಮಾತನಾಡಿ, ಪ್ರತಿ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಸಾಹಿತ್ಯ ಕಡೆಗಣಿಸುತ್ತಿರುವ ಚರ್ಚೆ ಉದ್ಭವಿಸುತ್ತದೆ. ಇಂತಹ ಸಂದರ್ಭದಲ್ಲಿ ಆದಿಚುಂಚನಗಿರಿ ಮಠ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಮುಂದಾಗಿರು ವುದು ಶ್ಲಾಘನೀಯ. ಅದಕ್ಕೆ ಬೇಕಾದ ಎಲ್ಲ  ಸಹಕಾರ ನೀಡಲಾಗುವುದು ಎಂದರು.

ನಗರಸಭೆ ಅಧ್ಯಕ್ಷ ಎಚ್.ಎಸ್. ಅನಿಲ್ ಕುಮಾರ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಪಿ. ಮೋಹನ್, ಉಪವಿಭಾಗಾಧಿಕಾರಿ ಎಚ್.ಎಲ್.ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಾಂತರಾಜು, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಸಿ. ಜಯದೇವಯ್ಯ, ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಎನ್.ಅಶೋಕ್, ಉಪಾಧ್ಯಕ್ಷ ಪಟೇಲ್ ಮಂಜುನಾಥ್ ಮತ್ತು ಭಾರತಿ, ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್, ಬಿಜಿಎಸ್ ಸ್ಟಡಿ ಸೆಂಟರ್ ನಿರ್ದೇಶಕ ಕುಶಾಲಪ್ಪ, ಎಚ್.ಬಿ. ಮದನಗೌಡ  ಇದ್ದರು.

ರಾಜ್ಯದ 17 ಜಿಲ್ಲೆಗಳಿಂದ ಮಕ್ಕಳು ಭಾಗವಹಿಸಿದ್ದರು. ಪ್ರೊ.ಡಿ.ಚಂದ್ರಪ್ಪ, ಬಿ.ಆರ್.ಉದಯಕುಮಾರ್ ಮತ್ತು ಎ.ಎಲ್.ನಾಗೇಶ್ ತೀರ್ಪುಗಾರರ ಕರ್ತವ್ಯ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.