ಹಾಸನ: ಕ್ಷೇತ್ರದ ಅಭಿವೃದ್ಧಿಗಾಗಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವಂತೆ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ರಂಗಸ್ವಾಮಿ ಮನವಿ ಮಾಡಿದರು.
ನಾಲ್ಕು ಬಾರಿ ಶಾಸಕರಾಗಿರುವ ಎಚ್.ಎಸ್.ಪ್ರಕಾಶ್ ಅವರ ನಿರ್ಲಕ್ಷ್ಯದಿಂದ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಬಗೆಹರಿದಿಲ್ಲ. ಕುಡಿಯುವ ನೀರು, ರಸ್ತೆ, ಒಳಚರಂಡಿ ಸಮಸ್ಯೆ ಬಗೆಹರಿಸುವಲ್ಲಿ ಶಾಸಕರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಇತರ ಜಿಲ್ಲಾ ಕೇಂದ್ರಕ್ಕೆ ಹೋಲಿಸಿದರೆ ಹಾಸನ ಅಭಿವೃದ್ಧಿಯಲ್ಲಿ ಸಂಪೂರ್ಣ ಹಿನ್ನಡೆಯಾಗಿದೆ. ದುದ್ದ ರಸ್ತೆ ಗುಂಡಿ ಬಿದ್ದಿದ್ದು, ಜನ ಸಂಚಾರ ಮಾಡಲು ಪರದಾಡುವಂತಾಗಿದೆ. ದೊಡ್ಡಪುರಕ್ಕೆ ಹೋಗಲು ಸರಿಯಾದ ರಸ್ತೆ ಇಲ್ಲ, ಹಾಸನ ನಗರಕ್ಕೆ ಹೊಂದಿ ಕೊಂಡಂತೆ ಇರುವ ಅನೇಕ ಹಳ್ಳಿಗಳ ರಸ್ತೆಗಳು ಹದಗೆಟ್ಟಿದ್ದರೂ ದುರಸ್ತಿ ಮಾಡಿಲ್ಲ ಎಂದು ಆರೋಪಿಸಿದರು.
ಬಿಜೆಪಿಯ ವರು ಹಣ, ಮದ್ಯ ಹಂಚುವ ಮೂಲಕ ಯುವ ಪೀಳಿಗೆಯನ್ನು ದಾರಿ ತಪ್ಪಿಸುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಿಂದ ಜನ ಬೇಸತ್ತಿದ್ದಾರೆ. ಪಕ್ಷದಿಂದ ಟಿಕೆಟ್ ಕೇಳಿದ್ದೇನೆ. ವರಿಷ್ಠರು ಟಿಕೆಟ್ ನೀಡುವ ಭರವಸೆ ಇದೆ ಎಂದು ಹೇಳಿದರು.
ಕಾಂಗ್ರೆಸ್ ಮುಖಂಡರಾದ ನಾರಾಯಣದಾಸ್, ನಾಗೇಂದ್ರ, ನಂಜೇಗೌಡ, ರಂಗಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.