ADVERTISEMENT

ಸಮಾಜ ಒಡೆಯುತ್ತಿರುವ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2017, 7:21 IST
Last Updated 1 ಸೆಪ್ಟೆಂಬರ್ 2017, 7:21 IST
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ   

ಹಾಸನ: ಅಧಿಕಾರ ದಾಹದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಜಾತಿ, ಧರ್ಮಗಳನ್ನು ಒಡೆದು ಆಳುವ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಇಲ್ಲಿ ಗುರುವಾರ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿ, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳುವ ಉದ್ದೇಶದಿಂದ ಲಿಂಗಾಯತ ಹಾಗೂ ವೀರಶೈವ ಪ್ರತ್ಯೇಕ ಧರ್ಮದ ವಿಚಾರ ಮುಂದಿಟ್ಟು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ' ಎಂದು ದೂರಿದರು.

ಜಾತಿ ಗಣತಿ ಹೆಸರಲ್ಲಿ ಜಾತಿ, ಜಾತಿಗಳ ನಡುವೆ ಮೇಲು– ಕೀಳು ಎಂಬ ಕಂದಕ ಸೃಷ್ಟಿಸುತ್ತಿದ್ದಾರೆ. ಜನರಲ್ಲಿ ಪರೋಕ್ಷವಾಗಿ ಜಾತಿಯ ಬೀಜ ಬಿತ್ತುತ್ತಿದ್ದಾರೆ. ರಾಜ್ಯದಲ್ಲಿ ಗೋ ಹತ್ಯೆ ರಾಜಾರೋಷವಾಗಿ ನಡೆಯುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಗೋ ಹತ್ಯೆಯನ್ನು ನಿಷೇಧ ಕಾಯ್ದೆ ಜಾರಿಗೆ ತರಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿತ್ತು. ಆಗ ರಾಜ್ಯಪಾಲರು ಮನವಿ ತಿರಸ್ಕರಿಸಿ ಕೇಂದ್ರಕ್ಕೆ ಕಳುಹಿಸಿದ್ದರು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯದಲ್ಲಿ ನಡೆಯುತ್ತಿರುವ ಗೋ ಹತ್ಯೆಗೆ ಕಾಂಗ್ರೆಸ್‌ ಸರ್ಕಾರ ಪ್ರಚೋದನೆ ನೀಡುತ್ತಿದೆ. ಈಚೆಗೆ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದ ಕಬೀರ್‌ ವ್ಯಕ್ತಿಯನ್ನು ಪೊಲೀಸ್‌ ಸಿಬ್ಬಂದಿ ಎನ್‌ಕೌಂಟರ್‌ ಮಾಡಿದ್ದರು. ಆನಂತರ ಆತನ ಕುಟುಂಬಕ್ಕೆ ಕಾಂಗ್ರೆಸ್ ಸರ್ಕಾರ ₹ 10 ಲಕ್ಷ ಪರಿಹಾರ ನೀಡಿತು’ ಎಂದರು.

ಕಾಂಗ್ರೆಸ್‌ ನಿರ್ದಿಷ್ಟ ಜಾತಿ ಜನರನ್ನು ಓಲೈಸುವ ಮೂಲಕ ಮತ ಬ್ಯಾಂಕ್‌ ರಾಜಕಾರಣ ಮಾಡುತ್ತಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನರು ಎಚ್ಚೆತ್ತುಕೊಳ್ಳದಿದ್ದರೆ ರಾಜ್ಯದಲ್ಲಿ ಗೋವು ಹಾಗೂ ಮಹಿಳೆಯರಿಗೆ ರಕ್ಷಣೆ ಸಿಗುವುದಿಲ್ಲ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.