ADVERTISEMENT

ಹಕ್ಕುಪತ್ರ ವಿತರಣೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2017, 8:41 IST
Last Updated 14 ಏಪ್ರಿಲ್ 2017, 8:41 IST

ಅರಸೀಕೆರೆ: ತಾಲ್ಲೂಕಿನ ಅರಣ್ಯ ಭೂಮಿ ಹಾಗೂ ಗೋಮಾಳದಲ್ಲಿ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಮುಖಂಡರು ಹಾಗೂ ನೂರಾರು ರೈತರು ನಗರದ ತಾಲ್ಲೂಕು ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಪ್ರಾಂತ ರೈತ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ನವೀನ್‌ ಕುಮಾರ್‌ ಮಾತನಾಡಿ, 50 ವರ್ಷಗಳಿಂದಲೂ ಅರಣ್ಯಭೂಮಿ ಮತ್ತು ಗೋಮಾಳದಲ್ಲಿ ಸಾಗುವಳಿ ಮಾಡುತ್ತಿರುವ ಸಾವಿರಾರು ರೈತರಿಗೆ ಇದುವರೆಗೂ ಹಕ್ಕುಪತ್ರ ಸಿಕ್ಕಿಲ್ಲ. ಈ ಬಗ್ಗೆ 30 ವರ್ಷಗಳಿಂದಲೂ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಗರ್‌ಹುಕುಂ ಸಾಗುವಳಿದಾರರಿಗೆ ಕಂದಾಯ ಸಚಿವರು ಹಕ್ಕು ಪತ್ರ ನೀಡುವಂತೆ ಸೂಚಿಸಿದ್ದಾರೆ ಎಂದು ದಾಖಲೆ ಪ್ರದರ್ಶಿಸಿದ ಅವರು, ಕೂಡಲೇ ತಹಶೀಲ್ದಾರ್‌ ಅವರು ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿರುವ ರೈತರ ಜಮೀನಿನ ಸರ್ವೆ ನಡೆಸಬೇಕು. ಇಲ್ಲದಿದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಗ್ರೇಡ್‌ 2 ತಹಶೀಲ್ದಾರ್‌ ವೈ.ಸಿ.ಫಾಲಾಕ್ಷ ಅವರಿಗೆ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT