ರಾಮನಾಥಪುರ(ಕೊಣನೂರು): ಬಸವಾಪಟ್ಟಣದ ಹೊಂಡಮಯ ರಸ್ತೆಯಲ್ಲಿ ಸಾರ್ವಜನಿಕರು ಮಂಗಳವಾರ ಭತ್ತದ ನಾಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಅಭಿವೃದ್ಧಿ ಪಡಿಸದ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ಅಧ್ಯಕ್ಷ ಯೋಗಣ್ಣ ಮಾತನಾಡಿ, ‘ಅಭಿವೃದ್ಧಿ ಹೆಸರಿನಲ್ಲಿ ನೆಪಮಾತ್ರಕ್ಕೆ ಎಂಬಂತೆ ಹಲವು ಸಲ ರಸ್ತೆ ಸರ್ವೆ ಕಾರ್ಯ ನಡೆಸಿ ಜನರ ಕಣ್ಣೊರೆಸಲಾಗುತ್ತಿದೆಯೇ ಹೊರತು ಯಾವುದೇ ಪ್ರಯೋಜನ ಆಗಿಲ್ಲ. ರಾಮನಾಥಪುರ, ಕೇರಳಾಪುರ ಮಾರ್ಗವಾಗಿ ಬೆಂಗಳೂರು ಮತ್ತು ಮೈಸೂರು ಕಡೆಗೆ ನಿತ್ಯ ಸಂಚರಿಸುವ ಪ್ರಯಾಣಿಕರಿಗೆ ರಸ್ತೆಗಳು ನರಕ ಸದೃಶವಾಗಿವೆ.
ಕಳೆದೊಂದು ದಶಕದಿಂದ ರಸ್ತೆ ದುರಸ್ತಿ ಆಗಿಲ್ಲ. ಶೀಘ್ರವೇ ರಸ್ತೆ ಅಭಿವೃದ್ಧಿ ಪಡಿಸದಿದ್ದರೆ ತೀವ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ರೈತ ಸಂಘದ ಕಾರ್ಯಕರ್ತರು, ಸಾರ್ವಜನಿಕರು, ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಸವಾಪಟ್ಟಣ ಹಳೇ ಸಂತೆ ಮೈದಾನದ ಬಳಿ ರಸ್ತೆ ಗುಂಡಿ ಬಿದ್ದ ಸ್ಥಳದಲ್ಲಿ ಸೋಮವಾರ ಸಂಜೆ ಸಾರ್ವಜನಿಕರು ಕಲ್ಲುಗಳನ್ನು ಇಟ್ಟು ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.