ADVERTISEMENT

ಆರು ಕ್ಷೇತ್ರಗಳಲ್ಲೂ ಗೆಲ್ಲುವುದೇ ಗುರಿ

ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಸಚಿವ ರುದ್ರಪ್ಪ ಲಮಾಣಿ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2018, 8:48 IST
Last Updated 10 ಏಪ್ರಿಲ್ 2018, 8:48 IST
ಹಾವೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಸ್.ಸಿ. ಶಿಡೇನೂರ ಅಧಿಕಾರ ಸ್ವೀಕರಿಸಿದರು. ಶಾಸಕ ಬಸವರಾಜ ಶಿವಣ್ಣನವರ, ಸಚಿವ ರುದ್ರಪ್ಪ ಲಮಾಣಿ, ಮಾಜಿ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ , ಮಹಿಳಾ ಘಟಕದ ಅಧ್ಯಕ್ಷೆ ರತ್ನಾ ಭೀಮಕ್ಕನವರ ಇದ್ದಾರೆ
ಹಾವೇರಿಯಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಎಸ್.ಸಿ. ಶಿಡೇನೂರ ಅಧಿಕಾರ ಸ್ವೀಕರಿಸಿದರು. ಶಾಸಕ ಬಸವರಾಜ ಶಿವಣ್ಣನವರ, ಸಚಿವ ರುದ್ರಪ್ಪ ಲಮಾಣಿ, ಮಾಜಿ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ , ಮಹಿಳಾ ಘಟಕದ ಅಧ್ಯಕ್ಷೆ ರತ್ನಾ ಭೀಮಕ್ಕನವರ ಇದ್ದಾರೆ   

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಐದು ವರ್ಷಗಳಲ್ಲಿ ಹಲವು ‘ಭಾಗ್ಯ’ಗಳ ಮೂಲಕ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದೆ. ಈ ಸಾಧನೆಗಳನ್ನು ಜನತೆಗೆ ತಿಳಿಸುವ ಮೂಲಕ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲಿಸಬೇಕು. ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಮಹಿಳಾ ಘಟಕದ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಕೆರೆ ತುಂಬಿಸುವ ಯೋಜನೆ, ವಸತಿ ಯೋಜನೆ, ರಸ್ತೆ ಅಭಿವೃದ್ಧಿ, ನೀರಾವರಿ, ಅಂಬೇಡ್ಕರ್‌, ವಾಲ್ಮೀಕಿ, ಜಗಜೀವನರಾಂ ಭವನಗಳನ್ನು ನಿರ್ಮಿಸುವುದರ ಜೊತೆಗೆ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ ಜರುಗಿಸಲಾಗಿದೆ. ಆದರೆ ಈ ಕುರಿತ ಪ್ರಚಾರದಲ್ಲಿ ನಾವು ಹಿಂದೆ ಬಿದ್ದಿದ್ದೇವೆ ಎಂದರು.ಆದರೆ, ಅಭಿವೃದ್ಧಿ ಮಾಡದ ಬಿಜೆಪಿಯವರು ಪದೇ ಪದೇ ಸುಳ್ಳು ಹೇಳುವ ಮೂಲಕ ಜನರನ್ನು ವಂಚಿಸಲು ಹೊರಟಿದ್ದಾರೆ. ಹೀಗಾಗಿ ಪಕ್ಷದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳು ನೈಜತೆಯನ್ನು ಜನತೆಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.

ನಮ್ಮ ಅಧಿಕಾರವಧಿಯಲ್ಲಿ ಎಲ್ಲರನ್ನು ತೃಪ್ತಿಪಡಿಸಲು ಸಾಧ್ಯವಾಗದೇ ಇದ್ದಿರಬಹುದು. ಆದರೆ, ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಬಿಟ್ಟು, ನಾವೆಲ್ಲ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು. ಆಗ, ಮುಂದಿನ ಬಾರಿ ಎಲ್ಲರಿಗೂ ನ್ಯಾಯ ಸಿಗಲು ಸಾಧ್ಯ ಎಂದರು.

ADVERTISEMENT

ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ಅಂದು ಕೇಂದ್ರದಲ್ಲಿದ್ದ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರವು ರೈತರ ಸಾಲ ಮನ್ನಾ ಮಾಡಿತು. ಆದರೆ, ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳು ಮತ್ತು ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆಯೇ ಹೊರತು ಬಡವರಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿದರು.

‘ರೈತರ ಸಾಲ ಮನ್ನಾ ಮಾಡಲು ನಾನು ನೋಟು ಪ್ರಿಂಟ್ ಮಾಡುವ ಮೆಷಿನ್ ಇಟ್ಟಿಲ್ಲ’ ಎಂದು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಹೇಳಿದ್ದರು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಬಳಿಕ ರೈತರ ಸಾಲ ಮನ್ನಾ ಮಾಡಿದರು. ರೈತರ ಪರ ಇರುವವರು ಯಾರು ಎಂದು ಜನರೇ ನಿರ್ಧರಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಸಿ.ಶಿಡೇನೂರ ಅವರಿಗೆ ಮಾಜಿ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಅಧಿಕಾರ ಹಸ್ತಾಂತರ ಮಾಡಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ರತ್ನಾ ಭೀಮಕ್ಕನವರ ಅಧಿಕಾರ ಸ್ವೀಕರಿಸಿದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ದೀಪಾ ಅತ್ತಿಗೇರಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಯಲ್ಲಪ್ಪ ಮಣ್ಣೂರ, ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಬಸವರಾಜ ಪೇಲನವರ, ಮುಖಂಡರಾದ ಸಂಜೀವಕುಮಾರ ನೀರಲಗಿ, ಏಕನಾಥ ಭಾನುವಳ್ಳಿ, ಬಸನಗೌಡ ದೇಸಾಯಿ, ಕೃಷ್ಣಪ್ಪ ಕಂಬಳಿ, ಪುಟ್ಟಪ್ಪ ಮರಿಯಮ್ಮನವರ,ಪಿ.ಎಸ್. ಬಿಷ್ಟನಗೌಡ್ರ, ಪ್ರಕಾಶ ಜೈನ್, ಪರಮೇಶಪ್ಪ ಎಣ್ಣಿಯವರ, ವೀಣಾ ಹಲಗಣ್ಣನವರ, ಎನ್.ಬಿ.ಗೌಡಗೇರಿ ಇದ್ದರು.

**

ಕಾಂಗ್ರೆಸ್ಸಿಗರು ಕೆಲಸ ಮಾಡಿದರೆ, ಬಿಜೆಪಿಯವರು ಸುಳ್ಳು ಪ್ರಚಾರದ ಮೂಲಕವೇ ಜನರನ್ನು ಮರಳು ಮಾಡಲು ಯತ್ನಿಸುತ್ತಾರೆ. ಜನತೆ ತಕ್ಕ ಪಾಠ ಕಲಿಸುತ್ತಾರೆ – ರುದ್ರಪ್ಪ ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.