ADVERTISEMENT

ಉದ್ಘಾಟನೆಗೂ ಮುನ್ನವೇ ಕೊಚ್ಚಿ ಹೋದ ಸೇತುವೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2017, 6:43 IST
Last Updated 11 ನವೆಂಬರ್ 2017, 6:43 IST

ರಾಣೆಬೆನ್ನೂರು: ಕಳೆದ ತಿಂಗಳು ಸುರಿದ ಧಾರಾಕಾರ ಮಳೆಗೆ ತಾಲ್ಲೂಕಿನ ಇಟಗಿ –ದೇವಗೊಂಡನಕಟ್ಟಿ ನಡುವಣ ಹಳ್ಳದ  ನಿರ್ಮಾಣ ಹಂತದಲ್ಲಿದ್ದ ಸೇತುವೆ ಉದ್ಘಾಟನೆಗೂ ಮುನ್ನವೇ ಕೊಚ್ಚಿ ಹೋಗಿದೆ. ಸೇತುವೆ ಕಾಮಗಾರಿ ಪರಿಶೀಲಿಸಿದ ತಾಲ್ಲೂಕು ಪಂಚಾಯ್ತಿ ಸದಸ್ಯ ಕರಿಯಪ್ಪ ತೋಟಗೇರ, ‘ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿತ್ತು. ಆದರೆ, ಕಾಮಗಾರಿ ಕಳಪೆಯಾಗಿದ್ದರಿಂದ ಸಂಪೂರ್ಣ ಕೊಚ್ಚಿ ಹೋಗಿದೆ. ಆದ್ದರಿಂದ, ಅದನ್ನು ಶೀಘ್ರವೇ ಅದೇ ವೆಚ್ಚದಲ್ಲಿ ದುರಸ್ತಿಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಈ ಸೇತುವೆ ಕೊಚ್ಚಿ ಹೋಗಿದ್ದರಿಂದ ಎರಡು ಗ್ರಾಮಗಳ ಜನರು ಸಂಚಾರಕ್ಕೆ ತೊಂದರೆಯಾಗಿದೆ’ ಎಂದು ಅವರು ದೂರಿದರು. ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮ ಪಂಚಾಯ್ತಿ ಅಧ್ಯಕ್ಷ ಪ್ರಕಾಶ ಡೊಂಬರಮತ್ತೂರ, ‘ಮಳೆ ಸುರಿದಾಗ ಕಾಮಗಾರಿ ಪ್ರಗತಿಯಲ್ಲಿ ಇತ್ತು. ಆದ್ದರಿಂದ, ನಿರ್ಮಾಣ ಹಂತದಲ್ಲಿದ್ದ ಸೇತುವೆ ಕೊಚ್ಚಿ ಹೋಗಿದೆ.

ಆದರೆ, ಕಾಮಗಾರಿ ಕಳಪೆಯಾಗಿಲ್ಲ. ಈ ಬಗ್ಗೆ ಗುತ್ತಿಗೆದಾರಿಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಶೀಘ್ರವೇ ಕಾಮಗಾರಿ ಪುನಃ ಪ್ರಾರಂಭಿಸಲಿದ್ದಾರೆ’ ಎಂದರು.
ಗ್ರಾಮ ಪಂಚಾಯ್ತಿ ಸದಸ್ಯರಾದ ರೂಪಾ ಶಿವಲಿಂಗಪ್ಪನವರ, ಹಾಲೇಶ ಗೋವಿಂದರಡ್ಡೇರ, ಸುಭಾಸಗೌಡ ಕರೇಗೌಡ್ರ, ರುದ್ರಗೌಡ ರಾಮಲಿಂಗಣ್ಣನವರ, ನಿಂಗಪ್ಪ ಬಿದರಿ ಹಾಗೂ ಮಲ್ಲಪ್ಪ ದೇಶಗತ್ತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.