ಹಾವೇರಿ: ‘ಎಂ.ಕೆ.ಅಭಿಷೇಕ ಆತ್ಮಹತ್ಯೆ ಕುರಿತು ಪ್ರತಿಭಟನೆ ನಡೆಸುತ್ತಿರುವ ಶೃಂಗೇರಿ ಹಾಗೂ ಚಿಕ್ಕಮಗಳೂರಿನ ವಿದ್ಯಾರ್ಥಿಗಳ ಜೊತೆ ಪೊಲೀಸರು ನಡೆದುಕೊಂಡ ರೀತಿ ಅಮಾನವೀಯವಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸದಸ್ಯರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಮುನ್ಸಿಪಲ್ ಹೈಸ್ಕೂಲ್ ಮೈದಾನದಿಂದ ರೈಲ್ವೆ ನಿಲ್ದಾಣ ಸಮೀಪದ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ತಹಶೀಲ್ದಾರ್ ಜೆ.ಬಿ.ಮಜ್ಜಗಿ ಅವರಿಗೆ ಮನವಿ ಸಲ್ಲಿಸಿದರು.
ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಕಿರಣ ಕೊಣ್ಣನವರ ಮಾತನಾಡಿ, ‘ಕಾಂಗ್ರೆಸ್ ರಾಜಕೀಯ ಪ್ರಭಾವ ಬಳಸಿ ನಿರಪರಾಧಿಯಾದ ಎಂ.ಕೆ.ಅಭಿಷೇಕ ಮೇಲೆ ಸುಳ್ಳು ಕೇಸು ದಾಖಲಿಸಿದ್ದಾರೆ.
ಇದರಿಂದ ಮಾನಸಿಕ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಭಿಷೇಕ ನಿಗೂಢ ಸಾವಿನ ಬಗ್ಗೆ ಪ್ರತಿಭಟನೆ ಮಾಡುತ್ತಿರುವ ಶೃಂಗೇರಿ ಹಾಗೂ ಚಿಕ್ಕಮಗಳೂರಿನ 20 ವಿದ್ಯಾರ್ಥಿಗಳ ಮೇಲೆ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ದೌರ್ಜನ್ಯ ಎಸಗಿದ್ದಾರೆ.
ಅವರ ಮೇಲೆ ಪ್ರಕರಣ ದಾಖಲಿಸಿರುವುದು ಅತ್ಯಂತ ಹೀನಾಯ ಕೆಲಸ. ಆ ಪೊಲೀಸ್ ಅಧಿಕಾರಿಯ ವಿರುದ್ಧ ಕಾನುನೂ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಪ್ರಜ್ವಲ್ ತಡಸ, ಧೀರೇಂದ್ರ ಕರ್ಣಂ, ಶರತ್ ಕುರಿಯವರ, ಶಿವರಾಜ ಸೂಡಿ, ಕಿರಣ ಬಣಕಾರ, ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ರಸ್ತೆ ತಡೆದು ಆಕ್ರೋಶ
ಹಿರೇಕೆರೂರ: ‘ಶೃಂಗೇರಿಯಲ್ಲಿ ಎಬಿವಿಪಿ ಕಾರ್ಯಕರ್ತ ಅಭಿಷೇಕ ಆತ್ಮಹತ್ಯೆಗೆ ಕಾರಣರಾದವರನ್ನು ತಕ್ಷಣ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಗುರುವಾರ ಪಟ್ಟಣದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ಕಾರ್ಯಕರ್ತರು ಸರ್ವಜ್ಞ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೆಲಕಾಲ ರಸ್ತೆತಡೆ ನಡೆಸಿದರು. ನಂತರ ತಹಶೀಲ್ದಾರ್ ಎ.ವಿ.ಶಿಗ್ಗಾವಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
‘ಎಬಿವಿಪಿ ಕಾರ್ಯಕರ್ತ ಅಭಿಷೇಕ ಆತ್ಮಹತ್ಯೆಗೆ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ಕಾರಣವಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಎಬಿವಿಪಿ ಕಾರ್ಯಕರ್ತರಾದ ವೆಂಕಟೇಶ ಡಾಂಗೆ, ಕಾರ್ತಿಕ್ ಯತ್ತಿನಹಳ್ಳಿ, ಬಸವರಾಜ ವಡೇ ಯನಪುರ, ವಿರೇಶ ದಿಕ್ಷೀತ್, ನಾಗ ರಾಜ ಹೊಸಮನಿ, ಪ್ರಶಾಂತ ಎಣ್ಣಿ, ಮಹೇಂದ್ರ ಡಿ.ಎಂ., ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.