ADVERTISEMENT

ಬ್ಯಾಡಗಿ ಬಂದ್‌ ಜ.25ಕ್ಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2018, 9:21 IST
Last Updated 17 ಜನವರಿ 2018, 9:21 IST

ಬ್ಯಾಡಗಿ: ‘ಪಟ್ಟಣದ ಮುಖ್ಯ ರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರವೇ ಆರಂಭಿಸುವಂತೆ ಒತ್ತಾಯಿಸಿ, ಜ.25ರಂದು ‘ಬ್ಯಾಡಗಿ ಬಂದ್‌‘ಗೆ ಕರೆ ನೀಡಲಾಗಿದೆ’ ಎಂದು ಮುಖ್ಯ ರಸ್ತೆ ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಚಲವಾದಿ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯ ರಸ್ತೆಯ ಮೂಲಕ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಹೀಗಾಗಿ, ಅದನ್ನು ದ್ವಿಮುಖ ರಸ್ತೆಯಾಗಿ ಅಭಿವೃದ್ಧಿಪಡಿಸುವಂತೆ ಕಳೆದ 12 ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ.

ಆದರೆ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮುಖ್ಯ ರಸ್ತೆ ಅಗಲೀಕರಣಕ್ಕೆ ಮುಂದಾಗುತ್ತಿಲ್ಲ. ಆದ್ದರಿಂದ, ಬ್ಯಾಡಗಿ ಬಂದ್‌ಗೆ ಕರೆ ನೀಡಲಾಗಿದೆ. ಪ್ರತಿಭಟನೆಗೆ ರಾಜ್ಯ ರೈತ ಸಂಘ, ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿವೆ’ ಎಂದರು. ರೈತ ಮುಖಂಡ ಗಂಗಣ್ಣ ಎಲಿ, ಚಂದ್ರು ಛತ್ರದ, ಮಹೇಶ ಉಜನಿ ಹಾಗೂ ಪಾಂಡು ಸುತಾರ ಇದ್ದರು.

ADVERTISEMENT

ಅಕ್ಕಿಆಲೂರ: ‘ಇಲ್ಲಿನ ದುಂಡಿಬಸವೇಶ್ವರ ಜನಪದ ಕಲಾಸಂಘ ಹಾಗೂ ರೈತ ಸಂಘ ಮತ್ತು ಹಸಿರು ಸೇನೆಯ ಆಶ್ರಯದಲ್ಲಿ ಜ.22 ರಂದು ರೈತ ಸಮಾವೇಶ ಆಯೋಜಿಸಲಾಗಿದೆ’ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ನಗರ ಘಟಕದ ಅಧ್ಯಕ್ಷ ಮಹೇಶ ವಿರಪಣ್ಣನವರ ನುಡಿದರು.

ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಸಮಾವೇಶವನ್ನು ಮೇಲುಕೋಟೆ ಶಾಸಕ, ರೈತ ಹೋರಾಟಗಾರ ಕೆ.ಎಸ್.ಪುಟ್ಟಣ್ಣಯ್ಯ ಉದ್ಘಾಟಿಸುವರು. ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಟಿ.ಗಂಗಾಧರ ವಿಶೇಷ ಸನ್ಮಾನ ಸ್ವೀಕರಿಸುವರು. ಕೃಷಿಯಲ್ಲಿ ಮಹತ್ವದ ಸಾಧನೆ ಮಾಡಿರುವ ಹಲವಾರು ರೈತರಿಗೆ ಗೌರವ ಸನ್ಮಾನ ನೀಡಲಾಗುವುದು’ ಎಂದು ಹೇಳಿದರು. ‌

ತಾಲ್ಲೂಕಾ ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ‘ಯುವಕರನ್ನು ಕೃಷಿಯತ್ತ ಸೆಳೆಯುವ ನಿಟ್ಟಿನಲ್ಲಿ ಸಮಾವೇಶದಲ್ಲಿ ಚಿಂಥನ–ಮಂಥನ ನಡೆಯಲಿದೆ. ಕನಿಷ್ಠ ನಿರ್ವಹಣೆ ವೆಚ್ಚದಲ್ಲಿ ಗರಿಷ್ಠ ಬೆಳೆ ತೆಗೆಯುವ ವಿಧಾನಗಳ ಕುರಿತು ಮಾಹಿತಿ ನೀಡಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.