ADVERTISEMENT

‘ಕಟ್ರಾಮುಕಿ: ಅಣೆಕಟ್ಟೆ ನಿರ್ಮಾಣಕ್ಕೆ ಕ್ರಮ’

​ಪ್ರಜಾವಾಣಿ ವಾರ್ತೆ
Published 16 ಮೇ 2017, 8:32 IST
Last Updated 16 ಮೇ 2017, 8:32 IST

ಕಲಬುರ್ಗಿ: ‘ಬೆಣ್ಣೆತೊರಾ ನದಿ ಮೇಲ್ಭಾಗದ ಕಮಲಾನಗರ ಪ್ರದೇಶದ ಕಟ್ರಾಮುಕಿ ಹತ್ತಿರ ಅಣೆಕಟ್ಟು ನಿರ್ಮಾಣಕ್ಕೆ ಕ್ರಮ ಜರುಗಿಸಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಜಿಲ್ಲೆಯ ಆಳಂದ ತಾಲ್ಲೂಕು ಕಮಲಾನಗರ ಮತ್ತು ಬೋಧನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹4.30 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾದ 17 ಕಾಮಗಾರಿಗಳಿಗೆ ಸೋಮವಾರ ಕಮಲಾನಗರದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಅಣೆಕಟ್ಟು ನಿರ್ಮಾಣಕ್ಕೆ ಹಿರಿಯ ಅಧಿಕಾರಿಗಳ ತಂಡದಿಂದ ಈಗಾಗಲೇ ಸಮೀಕ್ಷೆ ನಡೆಸಲಾಗಿದ್ದು, ಅವರ ವರದಿ ನಿರೀಕ್ಷಿಸಲಾಗುತ್ತಿದೆ. ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರೊಂದಿಗೆ ಚರ್ಚಿಸಿ, ಅಧಿಕಾರಿಗಳ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

‘ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. 371(ಜೆ) ಕಲಂ ಅಡಿಯಲ್ಲಿ ಈ ಭಾಗ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಮೀಸಲಾತಿ ನಿಗದಿಪಡಿಸಲಾಗಿದೆ. ಇದರಿಂದಾಗಿ ಬಡ ಮಕ್ಕಳು ಸಹ ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸುಗಳನ್ನು ಕಲಿಯುವಂತಾಗಿದೆ’ ಎಂದು ಅವರು ಹೇಳಿದರು.

‘ಸರ್ಕಾರವು ನಾಲ್ಕು ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ರೈತರ, ಬಡವರ ಅಭಿವೃದ್ಧಿಗಾಗಿ ಹಲವಾರು ಭಾಗ್ಯಗಳನ್ನು ರೂಪಿಸಿ ಸಮರ್ಪಕವಾಗಿ ಜಾರಿಗೊಳಿಸಿದೆ. ಬಡವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು. 

ಶಾಸಕ ಜಿ. ರಾಮಕೃಷ್ಣ, ಕರ್ನಾಟಕ ತೊಗರಿ ಮಂಡಳಿ ಅಧ್ಯಕ್ಷ ಭಾಗಣಗೌಡ ಪಾಟೀಲ ಸಂಕನೂರ, ಜಿಲ್ಲಾ ಪಂಚಾಯಿತಿ ಸದಸ್ಯರಾದ ವಿಜಯಲಕ್ಷ್ಮಿ ಎಂ. ರಾಗಿ, ಶರಣಗೌಡ ಡಿ. ಪಾಟೀಲ, ಬಸವರಾಜ ವರನಾಳ,  ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪಾರ್ವತಿಬಾಯಿ ವಿ. ಮಹಾಗಾಂವ, ಲಕ್ಕಪತಿ ಎಸ್. ಸಿಂಗೆ, ಲೋಕನಾಥ ಸಿ. ಸಜ್ಜನ್, ಕಮಲಾನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ರಾಮಪ್ಪ ಸಿ. ಜಂಗೆ ಇದ್ದರು.

ಕಮಲಾನಗರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ಸ್ವಾಗತಿಸಿದರು. ಶರಣಬಸಪ್ಪ ಕೆರಳ್ಳಿ ಕಾರ್ಯಕ್ರಮ ನಿರೂಪಿಸಿದರು. ಗುರುನಂಜಪ್ಪ ಲೋಕಾಣೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.