ಕಲಬುರ್ಗಿ: ಭವಿಷ್ಯನಿಧಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅವರ ನಿವಾಸದ ಎದುರು ಬುಧವಾರ ಘೋಷಣೆ ಕೂಗಿದರು.
ಮರಳು ಸಮಸ್ಯೆಯನ್ನು ಬಗೆಹರಿಸಬೇಕು. ಕಾರ್ಮಿಕ ಕಚೇರಿಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಕಾರ್ಮಿಕರ ಸೌಲಭ್ಯಗಳನ್ನು ತ್ವರಿತವಾಗಿ ವಿತರಿಸಬೇಕು. ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಆನ್ಲೈನ್ ನೋಂದಣಿಯನ್ನು ಚುರುಕುಗೊಳಿಸಬೇಕು. ಬಾಕಿ ಇರುವ ವಿವಾಹ, ಪಿಂಚಣಿ, ವೈದ್ಯಕೀಯ ಸೌಲಭ್ಯದ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆ ಮಂಜೂರು ಮಾಡಬೇಕು. ವಲಸೆ ಕಾರ್ಮಿಕರಿಗೂ ಗುರುತಿನ ಚೀಟಿ ವಿತರಿಸಬೇಕು. ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತಿಂಗಳಿಗೆ ಕನಿಷ್ಠ ₹18,000 ಕೂಲಿ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಸಮಿತಿಯ ಪದಾಧಿಕಾರಿಗಳಾದ ದೇವಣ್ಣ ಚನ್ನಕ್ಕಿ, ಭೀಮಶಾ ಹಳ್ಳಿ, ಯಶವಂತ ಪಾಟೀಲ, ದೇವೇಂದ್ರ ಕಟ್ಟಿಮನಿ, ನಾಗಯ್ಯಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.